ನಾಳೆ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ?
ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಗುರುವಾರ ಮಧ್ಯಾಹ್ನ 12.20ಕ್ಕೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಹೆಚ್ಚಿದೆ.
ರಾಜ್ಯಪಾಲ ವಜುಭಾಯಿ ವಾಲಾ ರನ್ನು ಭೇಟಿ ಮಾಡಿದ ಬಿಜೆಪಿ ನಿಯೋಗ, ನಮ್ಮ ಪಕ್ಷ 105 ಸದಸ್ಯರ ಬಲ ಹೊಂದಿದ್ದು, ಅತೀ ಹೆಚ್ಚು ಸಂಖ್ಯಾಬಲ ಇರುವ ಏಕೈಕ ಪಕ್ಷವಾಗಿದೆ. ಹೀಗಾಗಿ ಸರ್ಕಾರ ರಚನೆಗೆ ನಮಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದೆ.
ಈ ಸಂಬಂಧ ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ(ಶಿಷ್ಟಾಚಾರ) ಇಲಾಖೆಗೆ ರಾಜಭವನದಿಂದ ಸೂಚನೆ ರವಾನೆಯಾಗಿದೆ ಎಂದು ಮೂಲಗಳು ಹೇಳಿವೆ.
ರಾಜ್ಯಪಾಲರು ಆರೆಸ್ಸೆಸ್ ಹಿನ್ನೆಲೆವುಳ್ಳವರು: ಗುಜರಾತಿನವರಾದ ರಾಜ್ಯಪಾಲ ವಜುಭಾಯಿ ವಾಲಾ ಆರೆಸ್ಸೆಸ್ ಹಿನ್ನೆಲೆಯವರು. ಗುಜರಾತ್ ಸರ್ಕಾರದಲ್ಲಿ ಹಣಕಾಸು ಸಚಿವರಾಗಿ, ಬಳಿಕ ಸ್ಪೀಕರ್ ಆಗಿ ಕೆಲಸ ಮಾಡಿದವರು. ಪ್ರಧಾನಿ ಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗ ಅವರ ಜತೆ ಉತ್ತಮ ಒಡನಾಟ ಹೊಂದಿದವರು. ಈ ಬಾಂಧವ್ಯ ಬಳಸಿಕೊಂಡು ಸರ್ಕಾರ ರಚನೆ ಮಾಡಲು ಬಿಜೆಪಿ ಮುಂದಾಗಿದೆ ಎಂದು ಹೇಳಲಾಗಿದೆ.