ಬಂಟ್ವಾಳ: ವಿದ್ಯಾರ್ಥಿಗಳು ಬಾಲ್ಯದಿಂದಲೇ ಪಠ್ಯದ ಜೊತೆಗೆ ಕ್ರೀಡೆ ಬಗ್ಗೆಯೂ ಆಸಕ್ತಿ ಮೈಗೂಡಿಸಿಕೊಂಡಾಗ ಆರೋಗ್ಯದಾಯಕ ಮತ್ತು ಸಮೃದ್ಧ ಜೀವನ ನಡೆಸಲು ಸಾಧ್ಯವಾಗುತ್ತದೆ. ಇದಕ್ಕಾಗಿ ಇಲ್ಲಿನ ಹಳೆ ವಿದ್ಯಾರ್ಥಿ ಸಂಘಟನೆ ಕೈಗೊಂಡಿರುವ ವಿನೂತನ ಕಾರ್ಯಕ್ರಮ ಅನುಕರಣೀಯ ಎಂದು ಬಂಟ್ವಾಳ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ, ಎಲ್ಲೈಸಿ ಅಭಿವೃದ್ಧಿ ಅಧಿಕಾರಿ ಮಧ್ವರಾಜ್ ಬಿ.ಕಲ್ಮಾಡಿ ಹೇಳಿದರು.

ಸರಪಾಡಿ ಸಮೀಪದ ಬೀಯಪಾದೆ ಪೆರ್ಲ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಭಾನುವಾರ ಏರ್ಪಡಿಸಿದ್ದ ಸಾಧಕರಿಗೆ ಸನ್ಮಾನ ಮತ್ತು ಆಟೋಟ ಸ್ಪರ್ಧೆ ಕಾರ್ಯಕ್ರಮದಲ್ಲಿ ಅವರು ಸಮಾರೋಪ ಭಾಷಣ ಮಾಡಿದರು.
ಮೆಡಿಕಲ್ ಮುಖ್ಯಸ್ಥ ರಾಜೇಂದ್ರ ಜೈನ್ ಪೆರ್ಲಗುತ್ತು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇದೇ ವೇಳೆಯಲ್ಲಿ ರಾಷ್ಟ್ರೀಯ ಮಟ್ಟದ ಕಬಡ್ಡಿ ಕ್ರೀಡಾ ಪ್ರತಿಭೆ ಸುಶ್ಮಿತಾ ಇವರನ್ನು ಸನ್ಮಾನಿಸಲಾಯಿತು. ವಿವಿಧ ಆಟೋಟ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೀಲಾವತಿ ಡಿ.ಪೂಜಾರಿ, ಸಮೂಹ ಸಂಪನ್ಮೂಲ ವ್ಯಕ್ತಿ ಪ್ರದೀಪ್ ಕುಮಾರ್, ಪ್ರಗತಿಪರ ಕೃಷಿಕ ಲೋಕೇಶ ಪೂಜಾರಿ ಎಕ್ಕುಡೇಲುಬೈಲು, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಕೃಷ್ಣಪ್ಪ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಉಮೇಶ್, ಪ್ರಮುಖರಾದ ಅಬ್ದುಲ್ ಖಾದರ್ ಪೆರಾಲ, ಸತೀಶ ಪೂಜಾರಿ ಬೊಳ್ಳೂರು ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಮುಖ್ಯಶಿಕ್ಷಕ ಸುರೇಂದ್ರ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಇಸ್ಮಾಯಿಲ್ ವಂದಿಸಿದರು. ಗಿರಿಯಪ್ಪ ಬೀಯಪಾದೆ ಕಾರ್ಯಕ್ರಮ ನಿರೂಪಿಸಿದರು.
