ಬಂಟ್ವಾಳ:ಪ್ರಸಕ್ತ ಆಧುನಿಕ ತಂತ್ರಜ್ಞಾನ ವ್ಯವಸ್ಥೆ ಅಳವಡಿಸಿಕೊಂಡಿದ್ದರೂ ಇಲ್ಲಿನ ಬಹುತೇಕ ಗ್ರಾಮ ಪಂಚಾಯಿತಿಗಳು ಗ್ರಾಮೀಣ ಮಟ್ಟದದಲ್ಲಿ ಅಭಿವೃದ್ಧಿ ವಿಚಾರದಲ್ಲಿ ತೀರಾ ಹಿಂದುಳಿದಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸೆಲ್ವಮಣಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಲ್ಲಿನ ಬಿ.ಸಿ.ರೋಡು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಮಧ್ಯಾಹ್ನ ಏರ್ಪಡಿಸಿದ್ದ ಗ್ರಾಮ ಪಂಚಾಯಿತಿ ಪಿಡಿಒ ಸಹಿತ ವಿವಿಧ ಇಲಾಖೆ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಿಗೆ ನಿಗದಿಪಡಿಸಿರುವ ವಾರ್ಷಿಕ ಗುರಿ ಸಾಧನೆಗೆ ಸಂಬಂಧಿಸಿದಂತೆ ವಿಫಲಗೊಂಡ ಅಲ್ಲಿನ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಮತ್ತು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಅವರನ್ನು ತರಾಟೆಗೆ ತೆಗೆದುಕೊಂಡರು. ಬಹುತೇಕ ಪಂಚಾಯಿತಿಗಳಲ್ಲಿ ತೋmಗಾರಿಕಾ ಇಲಾಖೆಗೆ ಸಂಬಂಧಿಸಿದಂತೆ ಕ್ರಿಯಾಯೋಜನೆ ಸಿದ್ಧಪಡಿಸುವ ವಿಚಾರದಲ್ಲಿ ಕಾಮಗಾರಿ ಬಾಕಿ ಉಳಿದಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ತ್ವರಿತವಾಗಿ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು. ಉದ್ಯೋಗ ಖಾತರಿ ಯೋಜನೆ ಕಾಮಗಾರಿ ವಿಳಂಬ ಸಲ್ಲದು. ಘನತ್ಯಾಜ್ಯ ವಿಲೇವಾರಿ ಗೆ ಜಮೀನು ಗುರುತಿಸಬೇಕು ಎಂದರು. ತಾಂತ್ರಿಕ ಸಮಸ್ಯೆ ನೆಪದಲ್ಲಿ ಇಲ್ಲಿನ ಅಭಿವೃದ್ಧಿ ಕುಂಠಿತಗೊಳಿಸಿದರೆ ಉತ್ತರ ಕನ್ನಡ ಜಿಲ್ಲೆಯ ಗತಿಯೇನು…? ಎಂದರು. ಈ ತಿಂಗಳೊಳಗೆ ಬಾಕಿ ಉಳಿದಿರುವ ಕಾಮಗಾರಿ ಪೂರ್ಣಗೊಳಿಸಲು ಸಾಧ್ಯವಾಗದಿದ್ದರೆ, ಮುಂಬರುವ ಮಳೆಗಾಲದಲ್ಲಿ ಸಾಧ್ಯವಿದೆಯೇ…? ಎಂದು ಅವರು ಪ್ರಶ್ನಿಸಿದರು. ಇಲ್ಲಿನ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಭಿವೃದ್ಧಿಗೆ ಹಿನ್ನೆಡೆ ಉಂಟಾದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸುವ ಮೂಲಕ ಅವರು ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಸ್.ಆರ್.ಮಹೇಶ್, ನೆರವು ಘಟಕ ಸಂಚಾಲಕಿ ಮಂಜುಳಾ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಮತ್ತಿತರರು ಇದ್ದರು.
