ಬಂಟ್ವಾಳ: ಗಾಣಿಗ ಸಮಾಜವು ಅನಾದಿ ಕಾಲದಿಂದಲೂ ಧಾರ್ಮಿಕತೆ ಜೊತೆಗೆ ಸಾಮಾಜಿಕವಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿದ ಹಿರಿಯ ಪರಂಪರೆ ಹೊಂದಿದೆ. ಮುಂದಿನ ದಿನಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಕ್ಷೇತ್ರದಲ್ಲಿ ಕೂಡಾ ಎತ್ತರಕ್ಕೆ ಬೆಳೆದು ಹಿರಿಯರ ಮಾರ್ಗದರ್ಶನದಂತೆ ಸುಸಂಸ್ಕೃತ ಹಾದಿಯಲ್ಲಿ ಮುನ್ನಡೆಯುವ ಮೂಲಕ ಸಮಾಜದ ಋಣ ತೀರಿಸುವ ಮಹತ್ತರ ಹೊಣೆ ನಮ್ಮೆಲ್ಲರ ಮೇಲಿದೆ ಎಂದು ಉಳ್ಳಾಲ ಉಳಿಯ ಶ್ರೀ ಉಳ್ಳಾಲ್ತಿ ಧರ್ಮರಸರ ಕ್ಷೇತ್ರ ಧರ್ಮದರ್ಶಿ ದೇವು ಮೂಲ್ಯಣ್ಣ ಹೇಳಿದ್ದಾರೆ. ಬಂಟ್ವಾಳ ತಾಲ್ಲೂಕು ಗಾಣಿಗರ ಸೇವಾ ಸಂಘದ ವತಿಯಿಂದ ಪಾಣೆಮಂಗಳೂರು ಸುಮಂಗಲಾ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ವಿದ್ಯಾರ್ಥಿ ಪ್ರೋತ್ಸಾಹಧನ ವಿತರಣೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.
ಸಂಘದ ಅಧ್ಯಕ್ಷ ಬಿ.ರಘು ಸಪಲ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಘದ ಜಿಲ್ಲಾಧ್ಯಕ್ಷ ತಾರಾನಾಥ ಸುವರ್ಣ ಮಾತನಾಡಿ, ಮಕ್ಕಳು ಶೈಕ್ಷಣಿಕವಾಗಿ ಉನ್ನತ ಸಾಧನೆಗೆ ಸಂಘದ ವಿದ್ಯಾರ್ಥಿ ಪ್ರೋತ್ಸಾಹಧನ ಪೂರಕವಾಗಿದೆ ಎಂದರು. ಬಂಟ್ವಾಳ ತಾಲೂಕು ಗಾಣಿಗರ ಸೇವಾ ಸಂಘದ ಅಧ್ಯಕ್ಷ ರಘು ಸಪಲ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉನ್ನತ ವ್ಯಕ್ತಿಗಳಾಗಿ ಬೆಳೆದು ಸಂಘದ ಚಟುವಟಿಕೆಗಳಿಗೆ ಆಸರೆಯಾಗಬೇಕು ಎಂದರು. ಇದೇ ವೇಳೆ ಕಾಡಬೆಟ್ಟು ಪಿಲಿಂಗಾಲು ಶ್ರೀ ಗಾಯತ್ರಿದೇವಿ ದೇವಸ್ಥಾನದ ಆಡಳಿತ ಧರ್ಮದರ್ಶಿ ಕೆ.ಎಸ್.ಪಂಡಿತ್ ಮತ್ತು ಡಾಕ್ಟರೇಟ್ ಪದವಿ ಪುರಸ್ಕೃತ ಸ್ಯಾಕ್ಷೊಫೋನ್ ವಾದಕ ಬಾಬು ಸಪಲ್ಯ ವಗ್ಗ, ಶೈಕ್ಷಣಿಕ ಸಾಧಕ ವಿದ್ಯಾರ್ಥಿ ಕಿರಣ್ ಕುಮಾರ್ ಕಲ್ಲಡ್ಕ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಪತ್ರಕರ್ತ ಮೋಹನ್ ಕೆ.ಶ್ರೀಯಾನ್ ರಾಯಿ, ಶಿಕ್ಷಕ ಗಣೇಶ ಪಜೀರು, ಬಾಲಕೃಷ್ಣ ಸೆರ್ಕಳ ಮತ್ತು ವಸಂತ ಇವರು ಸನ್ಮಾನಿತರನ್ನು ಪರಿಚಯಿಸಿದರು. ಗರಿಷ್ಟ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಿ, ಸಾವಿರಕ್ಕೂ ಮಿಕ್ಕಿ ಮಂದಿ ವಿದ್ಯಾರ್ಥಿಗಳಿಗೆ ರೂ 6.5ಲಕ್ಷಕ್ಕೂ ಮಿಕ್ಕಿ ಮೊತ್ತದ ಪ್ರೋತ್ಸಾಹಧನ ವಿತರಿಸಲಾಯಿತು.
ಎಂಆರ್ಪಿಎಲ್ ಗ್ರೂಪ್ ಜನರಲ್ ಮ್ಯಾನೇಜರ್ ಸುಶೀಲ್ಚಂದ್ರ ಎಂ., ಮಂಗಳೂರು ಕರಾವಳಿ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ಎ.ಎಸ್.ವೆಂಕಟೇಶ್, ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ ಅಧ್ಯಕ್ಷ ಮಾಧವ ಎಸ್. ಮಾವೆ, ಬ್ಯಾರಿಸ್ಟರ್ ಅತ್ತಾವರ ಯಲ್ಲಪ್ಪ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಪಿ., ಉದ್ಯಮಿ ಹರೀಶ್ ಕುತ್ತಾರ್, ಸುಮಂಗಲಾ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ನಾರಾಯಣ ಸಪಲ್ಯ, ಮೂಡುಬಿದ್ರೆ ಗಾಣಿಗರ ಸಂಘದ ಅಧ್ಯಕ್ಷ ರಾಜೇಶ್ ಬಂಗೇರ, ಸತ್ಯದೇವತಾ ಚಾರಿಟೇಬಲ್ ಟ್ರಸ್ಟ್ನ ಸದಸ್ಯ ನಿತ್ಯಾನಂದ ಸಪಲ್ಯ ಮತ್ತಿತರರು ಶುಭ ಹಾರೈಸಿದರು.
ಸಂಘದ ಉಪಾಧ್ಯಕ್ಷ ನಾಗೇಶ ಕಲ್ಲಡ್ಕ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಸಂಘದ ಪ್ರಧಾನ ಕಾರ್ಯದರ್ಶಿ ಬಿ.ದಿನೇಶ್ ಬಂಗೇರ ವಂದಿಸಿದರು. ನಾಗೇಶ್ ಎಂ.ಪಾಣೆಮಂಗಳೂರು ಮತ್ತು ಸಹನಾ ಪೊಳಲಿ ಕಾರ್ಯಕ್ರಮ ನಿರೂಪಿಸಿದರು.
ಆರಂಭದಲ್ಲಿ ಸಂಪನ್ಮೂಲ ವ್ಯಕ್ತಿ ಚಂದ್ರಶೇಖರ ಎಡಪದವು ಅವರು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಗ್ಗೆ ಮಾಹಿತಿ ನೀಡಿದರು. 

