ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹಾಣ್ ಅವರು ಸಿಎಂ ಸ್ಥಾನಕ್ಕೆ ಶುಕ್ರವಾರ ರಾಜಿನಾಮೆ ನೀಡಿದ್ದಾರೆ. ಪೃಥ್ವಿರಾಜ್ ಚೌಹಾಣ್ ಅವರು ಸಂಜೆ ತಮ್ಮ ರಾಜಿನಾಮೆ ಪತ್ರವನ್ನು ಮಹಾರಾಷ್ಟ್ರ ರಾಜ್ಯಪಾಲ ಸಿ.ವಿ ರಾವ್ ಅವರಿಗೆ ಸಲ್ಲಿಸಿದ್ದಾರೆ. ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಸೀಟು ಹಂಚಿಕೆ ವಿಚಾರವಾಗಿ ಕಾಂಗ್ರೆಸ್ನೊಂದಿಗಿನ 15 ವರ್ಷಗಳ ಮೈತ್ರಿಗೆ ನಿನ್ನೆ ಎನ್ಸಿಪಿ ಅಂತ್ಯ ಹಾಡಿತ್ತು.
ಅಲ್ಲದೆ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ಗೆ ನೀಡಿದ್ದ ಬೆಂಬಲವನ್ನು ಎನ್ಸಿಪಿ ವಾಪಸ್ ಪಡೆದುಕೊಂಡಿತ್ತು. 288 ಸ್ಥಾನಗಳ ಪೈಕಿ ಎನ್ಸಿಪಿಯ 62 ಶಾಸಕರು ಬೆಂಬಲದೊಂದಿಗೆ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ನಿಂದ ಮುಖ್ಯಮಂತ್ರಿ ಗಾದಿಗೇರಿದ್ದ ಪೃಥ್ವಿರಾಜ್ ಚೌಹಾಣ್ ಅವರು ಎನ್ಸಿಪಿ ಬೆಂಬಲವನ್ನು ವಾಪಸ್ ಪಡೆದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಎನ್ಸಿಪಿ ಬೆಂಬಲ ವಾಪಸ್ ಪಡೆದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದ್ದು, ರಾಷ್ಟ್ರಪತಿ ಆಡಳಿತ ಏರುವಂತೆ ಬಿಜೆಪಿ ಪ್ರಸ್ತಾವನೆಯನ್ನು ರಾಜ್ಯಪಾಲರ ಮುಂದಿಟ್ಟಿತ್ತು ಎಂದು ಮೂಲಗಳಿಂದ ತಿಳಿದುಬಂದಿದೆ. ಮೂಲಗಳ ಪ್ರಕಾರ, ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಹೇರುವ ಕುರಿತಾಗಿ ಸಲಹೆ ನೀಡುವಂತೆ ಗೃಹ ಸಚಿವಾಲಯಕ್ಕೆ ರಾಜ್ಯಪಾಲ ಸಿ.ವಿ ರಾವ್ ಪತ್ರ ಬರೆದಿರುವುದಾಗಿ ತಿಳಿದುಬಂದಿದೆ.

