ಬಂಟ್ವಾಳ: ಸಾರ್ವಜನಿಕ ವಲಯದ ಅತಿ ಪ್ರಮುಖ ಹಾಗೂ ಕಡ್ಡಾಯ ಸೇವೆಯಾದ ಆಧಾರ್ ಕಾರ್ಡ್ ನೋಂದಣಿ ಮತ್ತು ತಿದ್ದುಪಡಿ ಕಾರ್ಯವನ್ನು ಗ್ರಾಮ ಪಂಚಾಯತಿ ಮಟ್ಟದಲ್ಲಿ ಆರಂಭಿಸುವಂತೆ ಆಗ್ರಹಿಸಿ ಬಿಜೆಪಿಯ ಗೋಳ್ತಮಜಲು ಶಕ್ತಿ ಕೇಂದ್ರದ ಸದಸ್ಯ ಪ್ರಕಾಶ್ ಕೋಡಿಮಜಲು ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದ್ದಾರೆ.ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ನಡೆಯುವುದರಿಂದ, ಗ್ರಾಮೀಣ ಜನರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಕೆಲವು ವರ್ಷಗಳ ಹಿಂದೆ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಕಾರ್ಯ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ನಡೆಯುತ್ತಿದ್ದು, ಸ್ಥಳೀಯ ನಿವಾಸಿಗಳಿಗೆ ಅನುಕೂಲವಾಗುತ್ತಿತ್ತು.
ಅಲ್ಲದೇ ಆಧಾರ್ ನೋಂದಣಿ ಕಾರ್ಯದ ಕಂಪ್ಯೂಟರ್, ಪ್ರಿಂಟರ್ ಮತ್ತಿತರ ಸಾಮಾಗ್ರಿಗಳನ್ನು ಕೂಡ ಪಂಚಾಯತಿಗಳಿಗೆ ಸರಬರಾಜು ಮಾಡಲಾಗಿದ್ದನ್ನು ಪತ್ರದಲ್ಲಿ ಅವರು ಮುಖ್ಯ ಮಂತ್ರಿಯ ಗಮನ ಸೆಳೆದಿದ್ದಾರೆ. ಪ್ರತಿಯೊಂದು ಗ್ರಾಮ ಪಂಚಾಯತಿ ಮಟ್ಟದಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕಾರ್ಯವನ್ನು ಮುಂದುವರಿಸುವುದರಿಂದ, ಸಣ್ಣ ಪ್ರಾಯದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ, ವಿಕಲಚೇತನರಿಗೆ, ಮಹಿಳೆಯರಿಗೆ ಹೆಚ್ಚು ಪ್ರಯೋಜನವಾಗುತ್ತದೆ. ಅಲ್ಲದೆ ತಾಲೂಕು, ಹೋಬಳಿ ಕೇಂದ್ರ ಮಟ್ಟದಲ್ಲಿ ಆಧಾರ್ ನೋಂದಣಿ ಕಾರ್ಯವನ್ನು ಒತ್ತಡ ರಹಿತವಾಗಿ ನಡೆಸಲು ಅವಕಾಶವಾಗುತ್ತದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ಈ ಸಮಸ್ಯೆಯನ್ನು ಮನಗಂಡು ತಾವುಗಳು, ತುರ್ತು ಕ್ರಮ ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕಾಗಿ ಈ ಪ್ರಕಾಶ್ ಕೋಡಿಮಜಲು ವಿನಂತಿಸಿದ್ದಾರೆ.

