ಅಡ್ಯನಡ್ಕದಲ್ಲಿ : ಆಕೃತಿ – 2019 ವಸ್ತು ಪ್ರದರ್ಶನ ಕಾರ್ಯಕ್ರಮಜರುಗಿತು. ಜನತಾ ವಿದ್ಯಾಸಂಸ್ಥೆಗಳ ಆಡಳಿತಾಧಿಕಾರಿ ರಮೇಶ್ ಎಂ. ಬಾಯಾರು ಅವರು ವಿಜ್ಞಾನ ಪ್ರಯೋಗದ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಜನತಾ ಪ್ರೌಢಶಾಲೆಯ ವಿಜ್ಞಾನ ಸಂಘ ಹಾಗೂ ಶ್ಯಾಮಲಾ ಇಕೋ ಕ್ಲಬ್ ವತಿಯಿಂದ ಆಯೋಜಿಸಿದ್ದ ಸಮಾರಂಭದಲ್ಲಿ ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ.ಆರ್. ನಾಯ್ಕ್, ವಿಜ್ಞಾನ ಮತ್ತು ಇಕೋ ಕ್ಲಬ್ ಮಾರ್ಗದರ್ಶಿ ಶಿಕ್ಷಕಿ ಕುಸುಮಾವತಿ, ಹಿರಿಯ ಶಿಕ್ಷಕ ಎಸ್. ರಾಜಗೋಪಾಲ ಜೋಶಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿ ನಾಯಕ ರೂಪೇಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನದ ಮಾದರಿ, ಕರಕುಶಲ ವಸ್ತುಗಳು, ಅಂಚೆಚೀಟಿ, ನಾಣ್ಯ, ಪ್ರಾಚ್ಯವಸ್ತುಗಳು, ಅಪರೂಪದ ಚಿತ್ರಗಳ ಪ್ರದರ್ಶನ ಮತ್ತು ಸ್ಪರ್ಧೆ ಏರ್ಪಡಿಸಲಾಗಿತ್ತು. ಕನ್ನಡ ಮಾಧ್ಯಮ ಹಾಗೂ ಆಂಗ್ಲಮಾಧ್ಯಮ ಶಾಲೆಯ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಜಲಮರುಪೂರಣ, ನೀರಿನ ಮಿತ ಬಳಕೆ , ಪರಿಸರ ಮಾಲಿನ್ಯದ ದುಷ್ಪರಿಣಾಮಗಳ ಬಗ್ಗೆ ಮಕ್ಕಳು ತಯಾರಿಸಿದ ಮಾದರಿಗಳು ವಿಶೇಷ ಗಮನ ಸೆಳೆದವು.
