ಮಂಗಳೂರು: ನಗರದಲ್ಲಿ ಕಳೆದ ಗುರುವಾರ ನಡೆದ ಹಿಂಸಾಚಾರ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ಷೇಪಿಸಿದ್ದಾರೆ. ಸೋಮವಾರ ಮಂಗಳೂರಿಗೆ ಭೇಟಿ ನೀಡಿದ ಅವರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಐಡಿ ಇಲಾಖೆಯಲ್ಲಿ ಕೆಲಸ ಮಾಡುವವರು ಪೊಲೀಸರೇ ಫೈರಿಂಗ್ ಕೂಡ ಮಾಡಿದ್ದು ಪೊಲೀಸರೇ. ಈಗ ಪ್ರಕರಣವನ್ನು ಪೊಲೀಸರಿಂದಲೇ ತನಿಖೆ ಮಾಡಿಸುವುದು ಎಷ್ಟು ಸೂಕ್ತ ಎಂದು ಪ್ರಶ್ನಿಸಿದರು.
ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಈ ಘಟನೆಯ ತನಿಖೆ ನಡೆಸಬೇಕು.ಇದರ ಬಗ್ಗೆ ಹಿಂದೆಯೂ ಒತ್ತಾಯಿಸಿದ್ದು,ಮುಂದೆಯೂ ಒತ್ತಾಯಿಸುತ್ತೇನೆ. ಮುಂದಿನ ಅಧಿವೇಶನದಲ್ಲೂ ಈ ಬಗ್ಗೆ ಪ್ರಸ್ತಾವಿಸಲಾಗುವುದು ಎಂದರು. ಮುಖ್ಯಮಂತ್ರಿ ಯಡಿಯೂರಪ್ಪನವರು ಸುಳ್ಳು ಹೇಳುವುದು ಬಿಟ್ಟರೆ ಅವರಿಗೆ ಸತ್ಯ ಹೇಳಿ ಗೊತ್ತಿಲ್ಲ. ಅವರು ಪೊಲೀಸರಿಗೆ ಸರ್ಟಿಫಿಕೇಟ್ ನೀಡುತ್ತಿದ್ದು, ಅವರೇನು ಪ್ರಮುಖ ಸಾಕ್ಷಿನಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಮುಖ್ಯಮಂತ್ರಿಯಾಗಿದ್ದಾರೆ. ಇಲ್ಲಿನ ವಿಚಾರದಲ್ಲಿ ಅವರು ಸರ್ಕಾರದ ರಿಮೋಟ್ ಕಂಟ್ರೋಲ್ ಅವರು ಕೂಡ ಪ್ರಚೋದನಕಾರಿ ಹೇಳಿಕೆ ನೀಡುತ್ತಾರೆ. ಅವರ ವಿರುದ್ಧವೂ ಪ್ರಕರಣ ದಾಖಲಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.
