ಬಂಟ್ವಾಳ ; ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ಐದು ಹಾಗೂ ಆರು ಮೀಟರ್ ನೀರು ಶೇಖರಣೆಯಾದಾಗ ಜಲಾವೃತವಾಗುವ ಭೂಪ್ರದೇಶಕ್ಕೆ ನೆಲ ಬಾಡಿಗೆ ಹಾಗೂ ಶಾಶ್ವತ ಪರಿಹಾರ ಸಿಗದೆ ಇರುವ ರೈತರ ಸಮಸ್ಯೆ ಪರಿಹರಿಸುವ ಕುರಿತು ಜಿಲ್ಲಾಡಳಿತ ನೀಡಿರುವ ಭರವಸೆಯನ್ನು ಈಡೇರಿಸದಿರುವ ಬಗ್ಗೆ ತುಂಬೆ ಡ್ಯಾಂ ಸಂತ್ರಸ್ತ ರೈತರ ಹೋರಾಟ ಸಮಿತಿ ಅಸಮಾಧಾನ ವ್ಯಕ್ತಪಡಿಸಿದೆ.
ಜಿಲ್ಲಾ ಉಸ್ತುವಾರಿ ಸಚಿವರು , ಶಾಸಕರು ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಸಮಸ್ಯೆಯನ್ನು ವಿವರಿಸಲಾಗಿತ್ತು.ಇದಕ್ಕೆ ಸ್ಪಂದಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪುಜಾರಿಯವರು ಫೆ.12 ಸಭೆ ನಡೆಸಿ, ಸಮಸ್ಯೆ ಬಗೆಹರಿಸುವ ಮಾತು ಕೊಟ್ಟಿದ್ದರು ಎಂದು ತುಂಬೆ ಡ್ಯಾಮ್ ಹೋರಾಟ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆದರೆ ಈತನಕ ತುಂಬೆ ಡ್ಯಾಂ ಸಂತ್ರಸ್ತ ರೈತರ ಸಭೆಯನ್ನು ಕರೆದಿರುವುದಿಲ್ಲ ಎಂದು ಭಟ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ 16 ವರ್ಷಗಳಿಂದ ತುಂಬೆ ಡ್ಯಾಂ ಸಂತ್ರಸ್ತ ರೈತರನ್ನು ಜಿಲ್ಲಾಡಳಿತ ವಿಶ್ವಾಸಕ್ಕೆ ತೆಗೆದುಕೊಳ್ಳದೆ ರೈತರಿಗೆ ಅನ್ಯಾಯ ವೆಸಗುತ್ತಿದೆ ಜಿಲ್ಲಾಡಳಿತ ರೈತರ ಸಮಸ್ಯೆಯ ಕುರಿತಾಗಿ ನಿರ್ಲಕ್ಷ್ಯ ಧೋರಣೆಯನ್ನು ಅನುಸರಿಸುತ್ತಿದ್ದು,ಇದನ್ನು ಖಂಡಿಸಿ ಸಂತ್ರಸ್ಥ ರೈತರು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲು ಚಿಂತಿಸುತ್ತಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೃಷಿಯನ್ನೇ ನಂಬಿ ಜೀವಿಸುವ ರೈತಾಪಿ ವರ್ಗದ ದೀರ್ಘಕಾಲೀನ ಈ ಸಮಸ್ಯೆಯನ್ನು ಕೂಡಲೇ ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡು ರೈತರ ಹಿತಾಸಕ್ತಿಯನ್ನು ಕಾಪಾಡುವಂತೆ ಅವರು ಮತ್ತೆ ಜಿಲ್ಲಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬಂಟ್ವಾಳ ಶಾಸಕರನ್ನು ಒತ್ತಾಯಿಸಿದ್ದಾರೆ.