ಶ್ರೀನಿವಾಸಪುರ: ಎಪಿಎಂಸಿ ಮಾರುಕಟ್ಟೆಯಲ್ಲಿ ಮಾವಿನ ವಹಿವಾಟು ಪ್ರಾರಂಭಿಸಲಾಗಿದೆ. ಕೊರೊನಾ ಸೋಂಕು ಹರಡದಂತೆ ಎಚ್ಚರಿಕೆ ವಹಿಸಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್ ಹೇಳಿದರು.
ಪಟ್ಟಣದ ಹೊರ ವಲಯದ ವಿಐಪಿ ಶಾಲೆಯ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಬಿಜೆಪಿ ಮುಖಂಡರ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮಾವು ತಾಲ್ಲೂಕಿನ ಜನರ ಜೀವಾಳ. ಆದರೆ ಕೊರೊನಾ ಆತಂಕ ಕಾಡುತ್ತಿದೆ. ತಾಲ್ಲೂಕು ಆಡಳಿತ ಹಾಗೂ ಎಪಿಎಂಸಿ ಮಾರುಕಟ್ಟೆ ಸಮಿತಿ ಸಾಧ್ಯವಾದ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಹೇಳಿದರು.
ಸರ್ಕಾರದಿಂದ ಮಾವು ಸಂಸ್ಕರಣ ಘಟಕ ಸ್ಥಾಪನೆ, ಇಲ್ಲಿನ ಮಾವು ಬೆಳೆಗಾರರ ಬಹುದಿನಗಳ ಬೇಡಿಕೆಯಾಗಿದೆ. ಇಲ್ಲಿ ಜಿಲ್ಲೆಯ ಮಾವಿಗೆ ಅಂಥ ಘಟಕಗಳ ಅಗತ್ಯವಿದೆ. ಸರ್ಕಾರದೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ರೈತರೂ ಸಹ ಕೊರೊನಾ ಹರಡದಂತೆ ಹೇಳಲಾಗಿರುವ ಸೂಚನೆಯನ್ನು ತಪ್ಪದೆ ಪಾಲಿಸಬೇಕು ಎಂದು ಹೇಳಿದರು.
ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ. ಕೆ.ಎನ್.ವೇಣುಗೋಪಾಲ್, ಮಾಜಿ ಅಧ್ಯಕ್ಷ ಬಿ.ಪಿ.ವೆಂಕಟಮುನಿಯಪ್ಪ, ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕರೆಡ್ಡಿ ಇದ್ದರು.
