ಬಂಟ್ವಾಳ : ತಾಲೂಕಿನ ಸರಪಾಡಿ ಸರಕಾರಿ ಶಾಲೆಯನ್ನು ದಡ್ಡಲಕಾಡು ಶಾಲೆಯ ರೀತಿಯಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸರಪಾಡಿ ಸರಕಾರಿ ಶಾಲೆ ಉಳಿಸಿ-ಬೆಳೆಸಿ ಸಮಿತಿಯನ್ನು ರಚಿಸಲಾಗಿದ್ದು, ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವ ಜತೆಗೆ ಊರವರು, ಹಳೆ ವಿದ್ಯಾರ್ಥಿಗಳು ಹೆಚ್ಚಿನ ನೆರವು ನೀಡುವ ಕಾರ್ಯ ಮಾಡಬೇಕು ಎಂದು ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿಯ ಅಧ್ಯಕ್ಷ ಪ್ರಕಾಶ್ ಅಂಚನ್ ಹೇಳಿದರು.ಅವರು ರವಿವಾರ ಸರಪಾಡಿ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಸರಪಾಡಿ ಸರಕಾರಿ ಶಾಲೆ ಉಳಿಸಿ-ಬೆಳೆಸಿ ಸಮಿತಿಯ ಸಹಯೋಗದಲ್ಲಿ ನಡೆದ ಶಾಲಾ ಅಭಿವೃದ್ಧಿಯ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು.
ಮುಂದಿನ ಶೈಕ್ಷಣಿಕ ವರ್ಷ ಆರಂಭದ ಕುರಿತು, ಶಾಲೆಯಲ್ಲಿ ಪೂರ್ವ ಪ್ರಾಥಮಿಕ ಆರಂಭದ ಕುರಿತು ಚರ್ಚೆ ನಡೆಸಿ ಅಭಿಪ್ರಾಯ ಪಡೆಯಲಾಯಿತು. ದಡ್ಡಲಕಾಡು ಶಾಲೆಯ ಹಿರಿಯ ಶಿಕ್ಷಕಿ ಹಿಲ್ಡಾ ಫೆರ್ನಾಂಡೀಸ್ ಶಾಲೆಯ ಅಭಿವೃದ್ಧಿಯ ಕುರಿತು ಸಲಹೆ ನೀಡಿದರು. ವೇದಿಕೆಯಲ್ಲಿ ಸರಪಾಡಿ ಗ್ರಾ.ಪಂ.ಸದಸ್ಯ ನಾಣ್ಯಪ್ಪ ಪೂಜಾರಿ ಬಿ, ಎಸ್ಡಿಎಂಸಿ ಅಧ್ಯಕ್ಷ ಗೋಪಾಲ ಪೂಜಾರಿ ಎಚ್. ಉಪಸ್ಥಿತರಿದ್ದರು.ಸರಕಾರಿ ಶಾಲೆ ಉಳಿಸಿ-ಬೆಳೆಸಿ ರಾಜ್ಯ ಸಮಿತಿಯ ಕಾರ್ಯದರ್ಶಿ ಪುರುಷೋತ್ತಮ ಅಂಚನ್, ದಡ್ಡಲಕಾಡು ಶಾಲಾ ಎಸ್ಡಿಎಂಸಿ ಅಧ್ಯಕ್ಷ ರಾಮಚಂದ್ರ ಪೂಜಾರಿ ಕರೆಂಕಿ ಸಲಹೆ-ಸೂಚನೆಗಳನ್ನು ನೀಡಿದರು. ಮಣಿನಾಲ್ಕೂರು ಸಿಎ ಬ್ಯಾಂಕ್ ಮುಖ್ಯಕಾರ್ಯನಿರ್ವಹಣಾಽಕಾರಿ ಸುಧಾಕರ ಶೆಟ್ಟಿ ಎಚ್. ಅವರು ಸಮವಸ್ತ್ರ ಹಾಗೂ ಪುಸ್ತಕಕ್ಕೆ ನೆರವು ನೀಡುವುದಾಗಿ ತಿಳಿಸಿದರು.
ಸರಪಾಡಿ ಸರಕಾರಿ ಶಾಲೆ ಉಳಿಸಿ-ಬೆಳೆಸಿ ಸಮಿತಿಯ ಅಧ್ಯಕ್ಷ, ಗ್ರಾ.ಪಂ.ಸದಸ್ಯ ಧನಂಜಯ ಶೆಟ್ಟಿ ನಾಡಬೆಟ್ಟು ಪ್ರಸ್ತಾವನೆಗೈದು ಸ್ವಾಗತಿಸಿದರು. ಶಾಲಾ ಮುಖ್ಯಶಿಕ್ಷಕ ಗಣೇಶ್ ರಾವ್ ವಂದಿಸಿದರು.
