ಬಂಟ್ವಾಳ: ದೇಶಾದ್ಯಂತ ಏಕರೂಪದ ಶಿಕ್ಷಣ ಜಾರಿಗೊಳಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ ಹೊಸ ಶಿಕ್ಷಣ ನೀತಿ ಜಾರಿಗೊಳಿಸಿರುವುದನ್ನು ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿ ಸ್ವಾಗತಿಸಿದೆ.
ದೆಹಲಿಯಲ್ಲಿ ಧರಣಿ ನಡೆಸಿ ಒಂದು ವರ್ಷ ಪೂರೈಸುತ್ತಿರುವ ಈ ಸಂದರ್ಭದಲ್ಲೇ ಕೇಂದ್ರ ಸರಕಾರ ಇಂತಹ ಮಹತ್ವದ ತೀರ್ಮಾನ ಪ್ರಕಟಿಸಿದೆ. ಇದು ಸರಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿಯ ಹೋರಾಟಕ್ಕೆ ಸಿಕ್ಕ ಜಯ ಎಂದು ಸಮಿತಿಯ ರಾಜ್ಯಾಧ್ಯಕ್ಷ ಪ್ರಕಾಶ್ ಅಂಚನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೇಶಾದ್ಯಂತ ಬಡವರಿಗೂ ಶ್ರೀಮಂತರಿಗೂ ಏಕರೂಪದ ಶಿಕ್ಷಣ ಸಿಗಬೇಕು, ಶಿಕ್ಷಣ ವಂಚಿತರಾಗಿರುವ ಎಲ್ಲಾ ಮಕ್ಕಳಿಗೂ ಶಿಕ್ಷಣ ನೀಡಬೇಕು ಎನ್ನುವ ಆಶಯವನ್ನಿಟ್ಟುಕೊಂಡು ಸರಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿ ಮತ್ತು ದಡ್ಡಲಕಾಡು ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ಮೂಲಕ ನಿರಂತರ ಹೋರಾಟ ನಡೆಸಿಕೊಂಡು ಬರಲಾಗುತ್ತಿದೆ. 2018ರಲ್ಲಿ ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್ ಅವರನ್ನು ಮಂಗಳೂರಲ್ಲಿ ಭೇಟಿಯಾಗಿ ಮನವಿಯನ್ನು ಸಲ್ಲಿಸಲಾಗಿತ್ತು.
ಆ ಬಳಿಕ ಕಳೆದ ವರ್ಷ ಜುಲೈ ತಿಂಗಳಲ್ಲಿ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಶ್ರೀ ರಾಜರಾಜೇಶ್ವರೀ ಸನ್ನಿಧಿಯಲ್ಲಿ ಪ್ರಾರ್ಥಿಸಿ ಪೊಳಲಿ ದೇಗುಳದ ಸನ್ನಿಧಿಯಿಂದ ಹೊರಟ ಭಾರತ ರಥಯಾತ್ರೆ ದೆಹಲಿ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಂಡ ಪರಿಣಾಮ ದೇವಿಯ ಅನುಗ್ರಹದಿಂದ ಗೋವಾ, ಮಹಾರಾಷ್ಟ್ರ, ಗುಜರಾತ್, ರಾಜಾಸ್ಥಾನ್, ಹರಿಯಾಣ, ದೆಹಲಿ ರಾಜ್ಯಗಳನ್ನು ಯಶಸ್ವಿಯಾಗಿ ಯಾತ್ರೆಯ ಮೂಲಕ ಸಂಪರ್ಕಿಸಲು ಸಾಧ್ಯವಾಯಿತು .
ಅಲ್ಲದೇ ವಿಶೇಷವಾಗಿ ಅಲ್ಲಿನ ಕೊಳೆಗೇರಿ, ಬೀದಿಗಳಲ್ಲಿ ಸಮಾನ ಶಿಕ್ಷಣ ಜಾರಿ ಹಾಗೂ ಶಿಕ್ಷಣದ ಮಹತ್ವದ ಬಗ್ಗೆ ಅರಿವು ಮೂಡಿಸಲು ಅ. 1 ರಂದು ದೆಹಲಿಯಲ್ಲಿ ನಡೆದ ಸಮಾರೋಪದಲ್ಲಿ ಕರ್ನಾಟಕದ ಸಂಸದರಾದ ನಳಿನ್ ಕುಮಾರ್ ಕಟೀಲು, ಪ್ರತಾಪ್ ಸಿಂಹ, ಭಗವಾನ್ ಕೂಬಾ ಅವರ ಮೂಲಕ ಕೇಂದ್ರ ಮಾನವ ಖಾತೆ ರಾಜ್ಯ ಸಚಿವ ರಮೇಶ್ ಪೋಕ್ರಿಯಾಲ್ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಏಕರೂಪ ಶಿಕ್ಷಣ ಜಾರಿಯ ಪೂರಕವಾಗಿ ಕೇರಳ, ತಮಿಳುನಾಡು, ಆಂಧ್ರಪ್ರದೇಶ, ರಾಜಾಸ್ಥಾನ ಅಧ್ಯಯನ ಪ್ರವಾಸ, ಕರ್ನಾಟಕದಲ್ಲಿ ರಥಯಾತ್ರೆ, ಬೆಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಎಲ್ಲಾ ಒಟ್ಟು ಹೋರಾಟದ ಬಹುತೇಕ ಆಶಯಗಳು ಹೊಸ ಶಿಕ್ಷಣ ನೀತಿಯಲ್ಲಿರುವುದು ಖುಷಿ ಕೊಟ್ಟಿದೆ ಎಂದು ಪ್ರಕಾಶ್ ಅಂಚನ್ ತಿಳಿಸಿದ್ದಾರೆ.
