ಬಂಟ್ವಾಳ: ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು, ಮುಖಂಡರು, ಅವರ ಬೆಂಬಲಿತರಿಗೆ ಚುನಾವಣಾ ಆಯೋಗ ಎಚ್ಚರಿಕೆಯೊಂದನ್ನು ನೀಡಿದೆ. ಗ್ರಾಮ ಪಂಚಾಯಿತಿ ಚುನಾವಣೆ ಪಕ್ಷರಹಿತ ಚುನಾವಣೆಯಾಗಿದ್ದು, ರಾಜಕೀಯ ಪಕ್ಷಗಳು ಈ ಚುನಾವಣೆಯಲ್ಲಿಯೂ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುವ, ಸಭೆ, ಸಮಾರಂಭಗಳನ್ನು ನಡೆಸುವ ರಾಜಕೀಯ ಮುಖಂಡರು ಭಾವಚಿತ್ರಗಳನ್ನು ಕರಪತ್ರಗಳಲ್ಲಿ ಮುದ್ರಿಸಿ ಪಕ್ಷಗಳ ಬಾವುಟ ಮತ್ತು ಚಿಹ್ನೆಯನ್ನು ಬಳಸಿಕೊಂಡು ಪ್ರಚಾರ ಮಾಡುವ ಸಂಭವ ಇರುವ ಕಾರಣ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದಂತೆ ಗ್ರಾಪಂ ಚುನಾವಣೆಯನ್ನು ಪಕ್ಷದ ಆಧಾರರಹಿತವಾಗಿ ನಡೆಸುವುದರಿಂದ ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳನ್ನು ಮಾತ್ರ ಹಂಚಿಕೆ ಮಾಡಲಾಗುತ್ತದೆ.ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಸ್ಪರ್ಧಾಳುಗಳಿಗೆ ಕಾನೂನು ಉಲ್ಲಂಘನೆಯಾಗದಂತೆ ಇವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಿದೆ.download

ರಾಜಕೀಯ ಪಕ್ಷಗಳು ಸಭೆ, ಸಮಾರಂಭಗಳನ್ನು ಏರ್ಪಡಿಸಿ, ವೇದಿಕೆ ಮೇಲೆ ಪಕ್ಷದ ಬಾವುಟ, ಬ್ಯಾನರುಗಳನ್ನು ಬಳಸುವಂತಿಲ್ಲ.ಸ್ಪರ್ಧಿಸುವ ಅಭ್ಯರ್ಥಿಗಳನ್ನು ತಮ್ಮ ಪಕ್ಷದ, ಬೆಂಬಲಿತ ಅಭ್ಯರ್ಥಿ ಎಂದು ಪರಿಚಯಿಸುವುದು, ಅವರ ಪರವಾಗಿ ಮತ ನೀಡಲು ಮತದಾರರನ್ನು ಕೋರುವಂತಿಲ್ಲ.ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ರಾಜಕೀಯ ಮುಖಂಡರ ಭಾವಚಿತ್ರ, ಪಕ್ಷದ ಚಿಹ್ನೆ ಇರುವ ಕರಪತ್ರಗಳನ್ನು ಮುದ್ರಿಸುವುದು, ಹಂಚುವುದು ಮಾಡುವಂತಿಲ್ಲ.

ರಾಜಕೀಯ ಮುಖಂಡರ ಭಾವಚಿತ್ರ, ರಾಜಕೀಯ ಪಕ್ಷಗಳ ಚಿಹ್ನೆ ಇರುವ ಕರಪತ್ರಗಳು, ಕಟೌಟ್ ಗಳು, ಬ್ಯಾನರುಗಳು, ಬಂಟಿಂಗ್ ಗಳ ಮೂಲಕ ಪ್ರಚಾರ ಮಾಡುವಂತಿಲ್ಲ.ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಟಿ.ವಿ. ಮಾಧ್ಯಮಗಳು, ಪತ್ರಿಕೆಗಳ ಮೂಲಕ ರಾಜಕೀಯ ಮುಖಂಡರ ಭಾವಚಿತ್ರ ಮತ್ತು ಪಕ್ಷಗಳ ಚಿಹ್ನೆಗಳನ್ನು ಬಳಸಿ ಜಾಹೀರಾತು ನೀಡುವಂತಿಲ್ಲ ಎಂದು ಆಯೋಗ ಕಟ್ಟುನಿಟ್ಟಾಗಿ ಸೂಚಿಸಿದೆ.

ಈ ಪ್ರಕರಣಗಳು ಗ್ರಾಪಂ ಚುನಾವಣೆಯಲ್ಲಿ  ಉಲ್ಲಂಘನೆಯಾಗಿರುವುದು ಕಂಡುಬಂದಲ್ಲಿ, ಅಂಥ ಚುನಾವಣಾ ಪ್ರಚಾರ ಸಾಮಗ್ರಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಮತ್ತು ಅಂಥವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರಗಿಸುವಂತೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗ ಸೂಚಿಸಿದೆ.

By suddi9

Leave a Reply

Your email address will not be published. Required fields are marked *