ಶ್ರೀನಿವಾಸಪುರ: ಯಾವುದೇ ಅಭಿವೃದ್ಧಿ ಕಾರ್ಯವನ್ನು ಅಡ್ಡಿಪಡಿಸಿಲ್ಲ್ಲ. ಅಡ್ಡಿಪಡಿಸಿರುವುದಾಗಿ ಶಾಸಕ ಕೆ.ಆರ್.ರಮೇಶ್ ಕುಮಾರ್ ಮಾಡಿರುವ ಆಪಾನೆಯಲಿಸತ್ಯಾಂಶವಿಲ್ಲ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.

ಪಟ್ಟಣದ ಜೆಡಿಎಸ್ ಕಚೇರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ತಾಲ್ಲೂಕಿನ ಸೋಮಯಾಜಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಿಗೆ ಹೆಚ್ಚು ಮತಗಳು ಬಂದಿರುವುದನ್ನು ಸಹಿಸಲಾಗದೆ, ಅಲ್ಲಿ ಏರ್ಪಡಿಸಲಾಗಿದ್ದ ಸಮಾರಂಭವೊಂದರಲ್ಲಿ ನನ್ನ ವಿರುದ್ಧ ಮಾತನಾಡಿದ್ದಾರೆ ಎಂದು ಹೇಳಿದರು.
ಮತದಾರರಲ್ಲಿ ಮೌಲ್ಯ ಕುಸಿದಿದೆ ಎಂದು ಹೇಳುವುದರ ಮೂಲಕ, ಮತದಾರರಿಗೆ ಅವಮಾನ ಮಾಡಿದ್ದಾರೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಮತ ನೀಡದ ಮತದಾರರನ್ನು ಗಮನದಲ್ಲಿಟ್ಟುಕೊಂಡು ಹಾಗೆ ಹೇಳಿದ್ದಾರೆ. ಅವರ ಮಾತು ಖಂಡನೀಯ ಎಂದು ಹೇಳಿದರು.
ಎತ್ತಿನ ಹೊಳೆ ಯೋಜನೆ ಜಾರಿ ಹಾಗೂ ಸ್ತ್ರೀ ಶಕ್ತಿ ಸಂಘಗಳಿಗೆ ಸಾಲ ನೀಡುವ ಬಗ್ಗೆ ವಿರೋಧ ವ್ಯಕ್ತಿಪಡಿಸಿಲ್ಲ. ಡಿಸಿಸಿ ಬ್ಯಾಂಕ್ ವತಿಯಿಂದ ಫಲಾನುಭವಿಗಳಿಗೆ ಬಡ್ಡಿರಹಿತ ಸಾಲ ನೀಡಲಾಗುತ್ತಿದೆ. ಆ ಹಣ ಯಾರಪ್ಪನದೂ ಅಲ್ಲ. ಹಣವನ್ನು ಅರ್ಹ ಫಲಾನುಭವಿಗಳಿಗೆ ನಿಯಮಾನುಸಾರ ವಿತರಿಸುವಂತೆ ಹೇಳಿದ್ದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿದರು.

ಕೆಸಿ ವ್ಯಾಲಿ ಯೋಜನೆ ಜಿಲ್ಲಾಧಿಕಾರಿಯಾಗಿದ್ದ ಡಿ.ಕೆ.ರವಿ ಅವರ ಕನಸಿನ ಕೂಸು. ಆದರೆ ಶಾಸಕ ಕೆ.ಆರ್.ರಮೇಶ್ ಕುಮಾರ್ ತಮ್ಮದೇ ಕೂಸು ಎಂಬಂತೆ ಹೆಗಲ ಮೇಲೆ ಹೊತ್ತು ತಿರುಗುತ್ತಿದ್ದಾರೆ. ಯೋಜನೆಗೆ ಟೆಂಡರ್ ಪ್ರಕ್ರಿಯೆ ಆದ ಮೇಲೆ ಅವರ ಪ್ರವೇಶವಾಯಿತು. ಯೋಜನೆ ಜಾರಿಗೆ ಆಗ ಮುಖ್ಯ ಮಂತ್ರಿಯಾಗಿದ್ದ ಎಚ್.ಡಿ.ಕುಮಾರಸ್ವಾಮಿ ಅವರಲ್ಲಿ ನಾನೂ ಮನವಿ ಮಾಡಿದ್ದೆ ಎಂದು ಹೇಳಿದರು.
ರಮೇಶ್ ಕುಮಾರ್ ಅವರು ನನ್ನನ್ನು ದೇವರ ಮುಂದೆ ಪ್ರಮಾಣ ಮಾಡಲು ಹೇಳಿದ್ದಾರೆ. ನನಗೆ ಜನರೇ ದೇವರು. ಬಹಿರಂಗ ಚರ್ಚೆಗೆ ಬರಲಿ, ಯಾರು ಏನೆಂಬುದು ತಿಳಿಯುತ್ತದೆ ಎಂದು ಹೇಳಿದರು.

ಪುರಸಭಾಧ್ಯಕ್ಷೆ ಎಂ.ಎನ್.ಲಲಿತಾ ಶ್ರೀನಿವಾಸ್, ಉಪಾಧ್ಯಕ್ಷೆ ಆಯಿಷಾ ನಯಾಜ್, ಸದಸ್ಯ ಬಿ.ವೆಂಕಟರೆಡ್ಡಿ, ಜಿಲ್ಲಾ ಪಂಚಾಯಿತಿ ಸದಸ್ಯ ಗಣೇಶ್, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಮಂಜುನಾಥರೆಡ್ಡಿ, ರಾಜಶೇಖರರೆಡ್ಡಿ, ಮುಖಂಡರಾದ ಪೂಲ ಶಿವಾರೆಡ್ಡಿ, ಬಿ.ಎಲ್.ಸೂರ್ಯನಾರಾಯಣ, ಕಾರ್ ಬಾಬು, ರವಿ, ಅಪ್ಪೂರು ರಾಜು ಆನಂದ್, ಹೋಳೂರು ಗೋಪಾಲಗೌಡ ಇದ್ದರು.

By Suddi9 Author

Suddi9

Leave a Reply

Your email address will not be published. Required fields are marked *