ಶ್ರೀನಿವಾಸಪುರ: ಬಿಎಸ್‍ಪಿ ಪದಾಧಿಕಾರಿಗಳು ಪಕ್ಷದ ಸಂಘಟನೆಗೆ ಮೊದಲ ಆದ್ಯತೆ ನೀಡಬೇಕು ಎಂದು ಪಕ್ಷದ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಹೇಳಿದರು.

ಪಟ್ಟಣದ ಬಿಎಸ್‍ಪಿ ಕಚೇರಿ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಗ್ರಾಮ ಪಂಚಾಯಿತಿ ಸೇರಿದಂತೆ ವಿವಿಧ ಹಂತದ ಚುನಾವಣೆಗಳಲ್ಲಿ ಸ್ಪರ್ಧಿಸಿ ಗೆಲ್ಲುವುದು ಹಾಗೂ ರಾಜ್ಯದಲ್ಲಿ ಅಧಿಕಾರ ಸ್ಥಾನಕ್ಕೆ ಏರುವುದು ಪಕ್ಷದ ಉದ್ದೇಶವಾಗಿದೆ. ಅದಕ್ಕೆ ಪೂರಕವಾಗಿ ಕೆಲಸ ಮಾಡಬೇಕು ಎಂದು ಹೇಳಿದರು.

ಸ್ವಾತಂತ್ರ್ಯ ಬಂದಾಗಿನಿಂದ ಅಧಿಕಾರ ನಡೆಸಿದ ಬೇರೆ ಬೇರೆ ಪಕ್ಷಗಳು ಬಡತನ ನಿವಾರಣೆ ಮಾಡುವಲ್ಲಿ ವಿಫಲವಾಗಿವೆ. ಮೂಲ ಸೌಕರ್ಯ ಕಲ್ಪಿಸಲು ಸಾಧ್ಯವಾಗಿಲ್ಲ. ಇಂಥ ಸಂದರ್ಭದಲ್ಲಿ ಮತದಾರರ ಒಲವು ಗಳಿಸಿದರೆ ಸಮಾಜದ ಎಲ್ಲ ವರ್ಗದ ಜನರಿಗೂ ಮೂಲ ಸೌಕರ್ಯ ಕಲ್ಪಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಜ.15 ರಂದು ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರ ಜನ್ಮದಿನಾಚರಣೆ ಆಚರಿಸಲಾಗುವುದು. ಅದಕ್ಕೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಬೇಕಾದ ಆರ್ಥಿಕ ಸಂಪನ್ಮೂಲ ಸಂಗ್ರಹಿಸಬೇಕು. ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಹೇಳಿದರು.

ಬಿಎಸ್‍ಪಿ ರಾಜ್ಯ ಘಟಕದ ಉಸ್ತುವಾರಿ ಮಾಯಸಂದ್ರ ಮುನಿಯಪ್ಪ ಪಕ್ಷದ ಸಂಘಟನೆ ಬಲಪಡಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾತನಾಡಿದರು.

ಮುಖಂಡರಾದ ನಾಗಪ್ಪ, ಅಶೋಕ ಚಕ್ರವರ್ತಿ, ಎಂ.ಜಿ.ಜಯಪ್ರಕಾಶ್, ಎಚ್.ಸಿ.ರಾಜು, ಮಂಜಲನಗರ ಚಂದ್ರಪ್ಪ, ಚಂಗಲರಾಯಶೆಟ್ಟಿ ಇದ್ದರು.

By Suddi9 Author

Suddi9

Leave a Reply

Your email address will not be published. Required fields are marked *