ಶ್ರೀನಿವಾಸಪುರ: ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶ ಪಾಲನೆ ಇಂದಿನ ಅಗತ್ಯವಾಗಿದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು. ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬುಧವಾರ ಏರ್ಪಡಿಸಿದ್ದ ಅಂಬೇಡ್ಕರ್ ಜಯಂತಿ ಸಮಾರಂಭದಲ್ಲಿ ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿ, ಅಂಬೇಡ್ಕರ್ ಜೀವನ ಶ್ರದ್ಧೆಯನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಅಂಬೇಡ್ಕರ್ ಬಡತನದಲ್ಲಿ ಬದುಕಿದರಾದರೂ, ಎಂದು ವೈಯಕ್ತಿಕ ಉಪಯೋಗಕ್ಕಾಗಿ ಕೈಯೊಡ್ಡಿದವರಲ್ಲ. ಅನ್ಯರ ಮುಂದೆ ಕೈಯೊಡ್ಡುವುದು ಸ್ವಾಭಿಮಾನಕ್ಕೆ ಧಕ್ಕೆ ತರುತ್ತದೆ ಎಂಬುದು ಅವರ ದೃಢವಾದ ನಂಬಿಕೆಯಾಗಿತ್ತು. ಹಾಗಾಗಿಯೇ ಅವರು ಜಗತ್ತಿನ ಮಹಾನ್ ವ್ಯಕ್ತಿಗಳ ಸಾಲಿಗೆ ಸೇರಲು ಸಾಧ್ಯವಾಯಿತು ಎಂದು ಹೇಳಿದರು. ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಬಿಇಒ ವಿ.ಉಮಾದೇವಿ, ಪೊಲೀಸ್ ಇನ್ಸ್ಪೆಕ್ಟರ್ ರವಿಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಮೇಗೌಡ, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಪುರಸಭಾದ್ಯಕ್ಷ ಎಂ.ಎನ್.ಲಲಿತಾ ಶ್ರೀನಿವಾಸ್, ಉಪಾಧ್ಯಕ್ಷೆ ಆಯಿಷಾ ನಯಾಜ್, ಮುಖ್ಯಾಧಿಕಾರಿ ಡಿ.ಶೇಖರರೆಡ್ಡಿ, ಸದಸ್ಯರಾದ ಬಿ.ವೆಂಕಟರೆಡ್ಡಿ, ನಾಗರಾಜ್, ಮುಖಂಡರಾದ ಎಂ.ಶ್ರೀನಿವಾಸನ್, ಮುಖಂಡರಾದ ರಾಮಾಂಜಮ್ಮ, ವೆಂಕಟೇಶ್, ಈರಪ್ಪ, ಟಿ.ನಾರಾಯಣಸ್ವಾಮಿ, ರಾಮಮೂರ್ತಿ ಇದ್ದರು.
ಪ್ರತಿಯೊಬ್ಬರೂ ಸಂವಿಧಾನದ ಆಶಯಗಳಿಗೆ ಬದ್ಧರಾಗಿ ನಡೆದುಕೊಳ್ಳಬೇಕು ಎಂದು ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ. ಕೆ.ಎನ್.ವೇಣುಗೋಪಾಲ್ ಹೇಳಿದರು. ಪಟ್ಟಣದ ಅಂಬೇಡ್ಕರ್ ಉದ್ಯಾನದಲ್ಲಿ, ಬುಧವಾರ ತಾಲ್ಲೂಕು ಬಿಜೆಪಿ ಘಟಕದ ವತಿಯಿಂದ ಏರ್ಪಡಿಸಿದ್ದ ಅಂಬೇಡ್ಕರ್ ಜಯಂತಿ ಸಮಾರಂಭದಲ್ಲಿ, ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿ, ಬಿಜೆಪಿ ಮೀಸಲಾತಿ ವಿರೋಧಿಯಲ್ಲ. ಅಗತ್ಯ ಇರುವ ಸಮುದಾಯಗಳಿಗೆ ಮೀಸಲಾತಿ ನೀಡುವುದನ್ನು ಬಿಜೆಪಿ ಬೆಂಬಲಿಸುತ್ತದೆ ಎಂದು ಹೇಳಿದರು. ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮೂಲಕ ಬದುಕು ಕಟ್ಟಿಕೊಳ್ಳಬೇಕು ಎಂಬುದು ಅಂಬೇಡ್ಕರ್ ಅವರ ವಾದವಾಗಿದೆ. ಅವರ ಈ ವಾದ ನಿತ್ಯ ಸತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು. ತಾಲ್ಲೂಕು ಬಿಜೆಪಿ ಅಧ್ಯಕ್ಷ ಅಶೋಕರೆಡ್ಡಿ, ಮಾಜಿ ಅಧ್ಯಕ್ಷ ನಾರಾಯಣಸ್ವಾಮಿ, ಮುಖಂಡರಾದ ಶಫಿವುಲ್ಲಾ, ರೆಡ್ಡಪ್ಪ ಇದ್ದರು.
