ನವದೆಹಲಿ: ರಷ್ಯಾ ಮತ್ತು ಉಕ್ರೇನ್ ಸಂಘರ್ಷದ ನಡುವೆ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರಿಸಲು ನಾಲ್ವರು ಕೇಂದ್ರ ಸಚಿವರು ಉಕ್ರೇನ್ನ ನೆರೆಯ ದೇಶಗಳಿಗೆ ಹಾರಲಿದ್ದಾರೆ. ಉಕ್ರೇನ್ ಬಿಕ್ಕಟ್ಟಿನಿಂದ ದೇಶವನ್ನು ತೊರೆಯಲು ಪ್ರಯತ್ನಿಸುತ್ತಿರುವ ಭಾರತೀಯರ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಉನ್ನತ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಸಚಿವರಾದ ಹರ್ದೀಪ್ ಪುರಿ, ಜ್ಯೋತಿರಾದಿತ್ಯ ಸಿಂಧಿಯಾ, ಕಿರಣ್ ರಿಜಿಜು ಮತ್ತು ವಿ.ಕೆ. ಸಿಂಗ್ ಅವರು ಭಾರತದ ವಿಶೇಷ ರಾಯಭಾರಿಗಳಾಗಿ ಉಕ್ರೇನ್ ಸುತ್ತಮುತ್ತಲಿನ ದೇಶಗಳಿಗೆ ತೆರಳಿ ಭಾರತೀಯರು ಸ್ಥಳಾಂತರಗೊಳ್ಳಲು ಸಹಾಯ ಮಾಡಲಿದ್ದಾರೆ.
ಮೋದಿ ಅವರು ನಡೆಸುತ್ತಿರುವ ಎರಡನೇ ಸಭೆ ಇದಾಗಿದ್ದು, ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಗೊಳಿಸಲು ಮೊದಲ ಆದ್ಯತೆ ನೀಡಲಾಗಿದೆ ಎಂದು ಮೋದಿ ತಿಳಿಸಿದ್ದಾರೆ. ಅಲ್ಲದೇ ಸಭೆಯಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್, ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಸೇರಿದಂತೆ ಹಲವು ಸಚಿವರು ಉಪಸ್ಥಿತರಿದ್ದರು.
ಉಕ್ರೇನ್ ಗಡಿಯಲ್ಲಿ ಸಿಲುಕಿರುವ ನೂರಾರು ಭಾರತೀಯರ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಸುಮಾರು 16,000 ವಿದ್ಯಾರ್ಥಿಗಳು ಉಕ್ರೇನ್ನ ಗಡಿಗಳಲ್ಲಿ ಸಿಲುಕಿಕೊಂಡಿದ್ದಾರೆ. ಬಾಂಬ್, ಶೆಲ್ಟರ್ಗಳಿಂದ ತಪ್ಪಿಸಿಕೊಳ್ಳಲು ಇನ್ನೂ ಕೆಲವರು ಹಾಸ್ಟೆಲ್ನ ನೆಲಮಾಳಿಗೆಗಳಲ್ಲಿ ಅಡಗಿಕೊಂಡಿದ್ದಾರೆ ಎಂದು ಎನ್ನಲಾಗುತ್ತಿದೆ.
ಮತ್ತೊಂದೆಡೆ ವಿರೋಧ ಪಕ್ಷಗಳು, ವಿದ್ಯಾರ್ಥಿಗಳು ಸೋಶಿಯಲ್ ಮೀಡಿಯಾದಲ್ಲಿ ವೀಡಿಯೊಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಆದರೂ ಭಾರತೀಯರನ್ನು ಸುಲಭವಾಗಿ ಮತ್ತು ಸುರಕ್ಷಿತ ಮಾರ್ಗಗಳಿಂದ ಭಾರತಕ್ಕೆ ಕರೆತರಲು ಸರ್ಕಾರ ಯಾವುದೇ ವ್ಯವಸ್ಥೆಗೊಳಿಸಿಲ್ಲ ಎಂದು ಆರೋಪಿಸಿದೆ.
