ಬಂಟ್ವಾಳ : ತಾಲ್ಲೂಕಿನ ಬಿ.ಸಿ.ರೋಡಿನಲ್ಲಿ ಎಡನೀರು ಕೇಶವಾನಂದ ಸ್ವಾಮೀಜಿ ಸಂಸ್ಮರಣೆ ಕಾರ್ಯಕ್ರಮಕ್ಕೆ ಸಿದ್ಧತೆ ನಡೆದಿದೆ. ಜಿಲ್ಲೆಯಲ್ಲಿ ಯಕ್ಷಗಾನ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಅನನ್ಯ ಕೊಡುಗೆ ಸಲ್ಲಿಸಿ ಬ್ರಹ್ಮೈಕ್ಯರಾದ ಎಡನೀರು ಕೇಶವಾನಂದ ಭಾರತೀ ಮಹಾಸ್ವಾಮಿ ಸಂಸ್ಮರಣೆ ಕಾರ್ಯಕ್ರಮ ಇದೇ ೬ರಂದು ಬೆಳಿಗ್ಗೆ ಗಂಟೆ ೯.೩೦ಕ್ಕೆ ಬಿ.ಸಿ.ರೋಡ್ ಸ್ಪರ್ಶಾ ಕಲಾಮಂದಿರದಲ್ಲಿ ನಡೆಯಲಿದೆ ಎಂದು ಸಂಚಾಲನ ಸಮಿತಿ ಅಧ್ಯಕ್ಷ ಕೈಯೂರು ನಾರಾಯಣ ಭಟ್ ಅವರು ಹೇಳಿದ್ದಾರೆ.
ಬಿ.ಸಿ.ರೋಡಿನಲ್ಲಿ ಮಂಗಳವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅದೇ ದಿನ ಸಾಮಾಜಿಕ ಮತ್ತು ಧಾರ್ಮಿಕ ಹಿರಿಯ ನೇತಾರ ಎ.ಸಿ ಭಂಡಾರಿ ಅವರಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು. ಅಂದು ಮೂಡುಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಇವರ ಅಧ್ಯಕ್ಷತೆಯಲ್ಲಿ ಎಡನೀರು ಮಠದ ಸಚ್ಚಿದಾನಂದ ಭಾರತೀ ಮಹಾಸ್ವಾಮಿ ಕಾರ್ಯಕ್ರಮ ಉದ್ಘಾಟಿಸುವರು. ಒಡಿಯೂರು ಗುರುದೇವಾನಂದ ಸ್ವಾಮೀಜಿ, ಮಾಣಿಲದ ಮೋಹನದಾಸ್ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅಭಿನಂದನಾ ಗ್ರಂಥ ಬಿಡುಗಡೆಗೊಳಿಸುವರು.
ಕೆಪಿಎಸ್ಸಿ ಮಾಜಿ ಅಧ್ಯಕ್ಷ ಟಿ. ಶ್ಯಾಮ ಭಟ್ ಅವರು ಸಂಸ್ಮರಣಾ ಗ್ರಂಥ ಬಿಡುಗಡೆಗೊಳಿಸುವರು ಎಂದರು. ಹಿರಿಯ ವಿದ್ವಾಂಸ ಡಾ.ಎಂ. ಪ್ರಭಾಕರ ಜೋಶಿ, ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯನ ಕೇಂದ್ರ ಅಧ್ಯಕ್ಷ ಪ್ರೊ, ಎಂ. ತುಕರಾಮ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲು, ಶಾಸರಾದ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯರಾದ ಕೆ. ಹರೀಶ್ ಕುಮಾರ್, ಡಾ.ಮಂಜುನಾಥ ಭಂಡಾರಿ, ಮಾಜಿ ಸಚಿವ ಬಿ. ರಮಾನಾಥ ರೈ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾನಿರ್ದೇಶಕ ಸತೀಶ್ ಶೆಟ್ಟಿ ಮತ್ತಿತರ ಗಣ್ಯರು ಭಾಗವಹಿಸುವರು. ಅಂದು ಮಧ್ಯಾಹ್ನ ಬಳಿಕ ಪ್ರಸಿದ್ದ ಕಲಾವಿದರ ಕೂಡುವಿಕೆಯಲ್ಲಿ ‘ಧಕ್ಷಾಧ್ವರ’ ಯಕ್ಷಗಾನ ಬಯಲಾಟ ನಡೆಯಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಮಿತಿ ಕಾರ್ಯಾಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ, ಪ್ರಮುಖರಾದ ರಾಜಮಣಿ ರಾಮಕುಂಜ, ಜಯರಾಮ್ ಪೂಜಾರಿ, ಕೃಷ್ಣ ಕುಮಾರ್ ಪೂಂಜ, ರಾಜಾ ಬಂಟ್ವಾಳ ಮತ್ತಿತರರು ಇದ್ದರು.
—
