ಬಂಟ್ವಾಳ: ಕನ್ನಡ ಸಾಹಿತ್ಯ ಪರಿಷತ್ತಿನ ಬಂಟ್ವಾಳ ತಾಲೂಕು ಘಟಕ ವತಿಯಿಂದ ಮಾರ್ಚ್ 18ರಂದು ಸ್ವಾತಂತ್ರ್ಯಯೋಧ, ಸಾಮಾಜಿಕ, ಸಹಕಾರಿ ಧುರೀಣ, ಸಾಹಿತಿ ಡಾ. ಅಮ್ಮೆಂಬಳ ಬಾಳಪ್ಪ ಅವರ ಶತಸಂಸ್ಮರಣೆ ಕಾರ್ಯಕ್ರಮ ಬಿ.ಸಿ.ರೋಡಿನ ಕೈಕುಂಜೆಯಲ್ಲಿರುವ ಕನ್ನಡ ಭವನದಲ್ಲಿ ಸಂಜೆ 4ಕ್ಕೆ ನಡೆಯಲಿದೆ.
ಅಧ್ಯಕ್ಷತೆಯನ್ನು ಕಸಾಪ ಜಿಲ್ಲಾಧ್ಯಕ್ಷ ಡಾ. ಎಂ.ಪಿ.ಶ್ರೀನಾಥ್ ವಹಿಸಲಿದ್ದು, ನಿವೃತ್ತ ಮುಖ್ಯೋಪಾಧ್ಯಾಯ ಮಹಾಬಲೇಶ್ವರ ಹೆಬ್ಬಾರ ಅವರು ಸಂಸ್ಮರಣಾ ಭಾಷಣ ಮಾಡಲಿದ್ದಾರೆ. ಡಾ. ಬಾಳಪ್ಪ ಸ್ಮಾರಕ ಸೇವಾ ಪ್ರತಿಷ್ಠಾನ ಕಾರ್ಯದರ್ಶಿ ಉಮೇಶ್ ಪಿ.ಕೆ, ಭಾರತ ಸೇವಾದಳ ಅಧ್ಯಕ್ಷ ಟಿ.ಶೇಷಪ್ಪ ಮೂಲ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಕಸಾಪ ಬಂಟ್ವಾಳ ತಾಲೂಕು ಅಧ್ಯಕ್ಷ ವಿಶ್ವನಾಥ ಬಂಟ್ವಾಳ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದೇ ಸಂದರ್ಭ ಕನ್ನಡ ಸಾಹಿತ್ಯ ಪರಿಷತ್ತು ಸದಸ್ಯತ್ವ ನೋಂದಣಿ ಕಾರ್ಯಕ್ರಮವೂ ನಡೆಯಲಿದ್ದು, ಎರಡು ಫೊಟೋ, ಆಧಾರ್ ಪ್ರತಿ ಹಾಗೂ 500 ರೂಗಳನ್ನು ನೀಡಿದರೆ ನೋಂದಣಿ ಮಾಡಬಹುದು ಎಂದು ಕಸಾಪ ಪ್ರಕಟಣೆ ತಿಳಿಸಿದೆ.
