ಕಲಬುರಗಿ: ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ, ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಇದರಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟಪಡಿಸಿದರು.

ಎರಡು ದಿನಗಳ ಪ್ರವಾಸಕ್ಕೆ ಗುರುವಾರ ಕಲಬುರಗಿಗೆ ಆಗಮಿಸಿದ ಅವರು ನಗರದ ಡಿ.ಎ.ಆರ್ ಪರೇಡ್ ಮೈದಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಅಕ್ರಮ ನೇಮಕಾತಿ ಬಗ್ಗೆ ಪ್ರಾಥಮಿಕ ತನಿಖೆಯಿಂದ ಮಾಹಿತಿ ಬಂದ ಕೂಡಲೇ ನಮ್ಮ ಸರ್ಕಾರ ಹೆಚ್ಚಿನ ತನಿಖೆಗಾಗಿ ಸಿಐಡಿಗೆ ವಹಿಸಿದೆ. ಸಿಐಡಿ ತನಿಖೆ ನಡೆಸುತ್ತಿದ್ದು, ಈಗಾಗಲೇ ಕಲಬುರಗಿಯಲ್ಲಿ ಕೆಲವರನ್ನು ಬಂಧಿಸಿ ವಿಚಾರಣೆ ಸಹ ನಡೆಸುತ್ತಿದೆ ಎಂದರು.

ಪಿಎಸ್ಐ ನೇಮಕಾತಿ ಮರುಪರೀಕ್ಷೆ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಈ ಕುರಿತಂತೆ ತನಿಖೆಯ ಮಧ್ಯಂತರ ವರದಿ ಕೇಳಲಾಗಿದೆ. ವರದಿ ಬಂದ ನಂತರ ನಿರ್ಧರಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಮುರುಗೇಶ ನಿರಾಣಿ, ಕೆಕೆಆರ್ಡಿಬಿ ಅಧ್ಯಕ್ಷ ದತ್ತಾತ್ರೆಯ ಪಾಟೀಲ ರೇವೂರ, ಶಾಸಕ ಬಸವರಾಜ ಮತ್ತಿಮೂಡ, ವಿಧಾನ ಪರಿಷತ್ ಸದಸ್ಯರಾದ ಶಶಿಲ್ ಜಿ. ನಮೋಶಿ, ಸುನೀಲ್ ವಲ್ಯಾಪೂರೆ, ಕೃಷ್ಣಾ ಕಾಡಾ ಅಧ್ಯಕ್ಷ ಶರಣಪ್ಪ ತಳವಾರ, ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರು, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಮಾಜಿ ಎಂಎಲ್ಸಿ ಅಮರನಾಥ ಪಾಟೀಲ ಇದ್ದರು.
