ಬಂಟ್ವಾಳ: ದ.ಕ.ಜಿಲ್ಲೆಯಲ್ಲಿ ಕೆಂಪು ಕಲ್ಲು- ಮರಳಿನ ವಿಚಾರದಲ್ಲಿ ತಲೆದೋರಿರುವ ಸಮಸ್ಯೆಯನ್ನು ಅದಷ್ಟು ಶೀಘ್ರ ಪರಿಹರಿಸುವ ನಿಟ್ಟಿನಲ್ಲಿ ಸರಳವಾದ ರೀತಿಯ ಕಾನೂನು ಮಾಡುವ ಮೂಲಕ ಜಿಲ್ಲೆಯ ಜನಸಾಮಾನ್ಯರಿಗೆ ನ್ಯಾಯ ಒದಗಿಸಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಅವರ ನೇತೃತ್ವದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಮೂಲಕ ಒತ್ತಾಯಿಸಿದೆ.

ಅಕ್ರಮ ಮರಳು ಹಾಗೂ ಕೆಂಪುಕಲ್ಲಿನ ಸಾಗಾಟವನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳು ತೆಗೆದುಕೊಂಡಿರುವ ಶ್ಲಾಘನೀಯ ಕ್ರಮವನ್ನು ಸಿಎಂ ಗಮನಕ್ಕೆ ತಂದಿರುವ ನಿಯೋಗ ದ.ಕ. ಜಿಲ್ಲೆಯ ವ್ಯಾಪ್ತಿಯಲ್ಲಿ ಅಧಿಕೃತವಾಗಿ ಸಾಂಪ್ರದಾಯಿಕ ಮರಳುಗಾರಿಕೆ ಮತ್ತು ಕಲ್ಲು ಗಣಿಗಾರಿಕೆಯನ್ನು ನಡೆಸಲು ಕ್ರಮ ಕೈಗೊಳ್ಳಬೇಕು ಎಲ್ಲರಿಗೂ ಕಡಿಮೆ ದರದಲ್ಲಿ ಸರಳ ಮತ್ತು ಸರಾಗವಾಗಿ ಪೂರೈಕೆಯಾಗುವಂತೆ ಕ್ರಮಕೈಗೊಳ್ಳಲು ಸಂಬಂಧಪಟ್ಟವರಿಗೆ ಸೂಚನೆ ನೀಡುವಂತೆಯು ಒತ್ತಾಯಿಸಿದೆ.
ಸಿಎಂ ಗೆ ಅಭಿನಂದನೆ:
ಅದೇರೀತಿ ದ.ಕ.ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ನಡೆದ ಸರಣಿ ಕೊಲೆಗಳು, ಮತೀಯ ಸಂಘರ್ಷಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ದ.ಕ.ಜಿಲ್ಲೆಯಲ್ಲಿ ಆ್ಯಂಟಿ ಕಮ್ಯೂನಲ್ ವಿಂಗ್ ಸ್ಪೆಷಲ್ ಇನ್ವಷ್ಟಿಗೇಷನ್ ತಂಡವನ್ನು ಸ್ಥಾಪಿಸಿ ಸೌಹಾರ್ದ ವಾತಾವರಣ ಉಂಟಾಗುವ ದೆಸೆಯಲ್ಲಿ ದಿಟ್ಟ ಕ್ರಮಕೈ ಗೊಂಡಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಸಚಿವ ರಮಾನಾಥ ರೈ ನೇತೃತ್ವದ ನಿಯೋಗ ಅಭಿನಂದನೆ ಸಲ್ಲಿಸಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಬೇಬಿ ಕುಂದರ್ , ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾಜಿ ಸದಸ್ಯರಾದ ಪಿಯೂಸ್ ಎಲ್. ರೊಡ್ರಿಗಸ್, ಮಾಜಿ ಧಾರ್ಮಿಕಪರಿಷತ್ ಅಧ್ಯಕ್ಷ ಪದ್ಮನಾಭ ಕೋಟ್ಯಾನ್, ಬಂಟ್ವಾಳ ಪುರಸಭಾ ಸದಸ್ಯ ಶರೀಫ್ ,ಕಾಂಗ್ರೆಸ್ ನಾಯಕ ಶಬೀರ್ ಸಿದ್ದಕಟ್ಟೆ ಮತ್ತಿತರರಿದ್ದರು.
