ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂಗಳ ಮೇಲೆ ನಿರಂತರ ಹಲ್ಲೆ ಪ್ರಕರಣಗಳು ನಡೆಯುತ್ತಿದ್ದು ರಾಜ್ಯ ಸರಕಾರದ ನಿಷ್ಕ್ರಿಯತೆಯಿಂದಾಗಿ ಜನತೆ ಭಯಭೀತರಾಗಿದ್ದಾರೆ. ಕೇಂದ್ರ ಸರಕಾರ ತತ್ಕ್ಷಣ ಮಧ್ಯ ಪ್ರವೇಶಿಸಿ ಶಾಂತಿ ಸುವ್ಯವಸ್ಥೆ ಕಾಪಾಡಲು ಸೂಕ್ತ ನಿರ್ದೇಶನ ನೀಡಬೇಕು ಎಂದು ಸಂಸದ ನಳಿನ್ಕುಮಾರ್ ಕಟೀಲು ಅವರು ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಅವರನ್ನು ವಿನಂತಿಸಿದ್ದಾರೆ.
ಕರಾವಳಿ ಜಿಲ್ಲೆ ಉಗ್ರಗಾಮಿ ಸಂಘಟನೆಗಳ ಆಶ್ರಯ ತಾಣವಾಗುತ್ತಿರುವ ಬಗ್ಗೆ ಈಗಾಗಲೇ ಆತಂಕವಿದೆ. ಇತ್ತೀಚೆಗೆ ಹಿಂದೂಗಳ ಮನೆಗೆ ನುಗ್ಗಿ ಮಹಿಳೆಯರು ಮತ್ತು ಮಕ್ಕಳ ಮೇಲೆ ಹಲ್ಲೆ ನಡೆಸಿದ್ದರೂ ಪೊಲೀಸರು ಯಾವುದೇ ಬಿಗು ಕ್ರಮ ಕೈಗೊಂಡಿಲ್ಲ. ಕಾಂಗ್ರೆಸ್ ಸರಕಾರದ ತುಷ್ಟೀಕರಣ ನೀತಿಯಿಂದಾಗಿ ಹಿಂದೂಗಳಿಗೆ ಭದ್ರತೆ ಇಲ್ಲವಾಗಿದೆ. ಕೇಸರಿ ಶಾಲು ಧರಿಸಿದವರನ್ನು ಊರಿಗೆ ಪ್ರವೇಶಿಸಲು ಬಿಡುವುದಿಲ್ಲ ಎಂದು ಮತಾಂಧರು ಬಹಿರಂಗವಾಗಿ ಬೆದರಿಕೆ ಒಡ್ಡಿದ್ದು, ಇದರ ಹಿನ್ನೆಲೆಯಲ್ಲಿ ಉಗ್ರಗಾಮಿ ಸಂಘಟನೆಗಳ ಕೈವಾಡ ಇರುವ ಶಂಕೆ ಇದೆ ಎಂದು ತಿಳಿಸಿದ್ದಾರೆ.
ಹಿಂದೂ ಸಂಘಟನೆಯ ಯುವಕರ ಮೇಲೆ ವಿನಾ ಕಾರಣ ಕೇಸು ದಾಖಲಿಸಿ ಜೈಲಿಗೆ ಕಳುಹಿಸುವ ಮೂಲಕ ಹಿಂದೂಗಳನ್ನು ದಮನಿಸುವ ವ್ಯವಸ್ಥಿತ ಷಡ್ಯಂತ್ರ ನಡೆದಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಗಮನ ಹರಿಸಿ ಹಿಂದೂಗಳಿಗೆ ಸೂಕ್ತ ರಕ್ಷಣೆ ಒದಗಿಸಬೇಕಾದ ಅನಿವಾರ್ಯತೆ ಇದೆ ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.

