ತೀರ್ಥಹಳ್ಳಿ: ತೀರ್ಥಹಳ್ಳಿಯಲ್ಲಿ ನಿಗೂಢವಾಗಿ ಸಾವನ್ನಪ್ಪಿದ 8ನೇ ತರಗತಿ ವಿದ್ಯಾರ್ಥಿನಿ ನಂದಿತಾ ತಂದೆ ಕೃಷ್ಣಮೂರ್ತಿ ಅವರ ದಿನಸಿ ಅಂಗಡಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.
ಬೆಳಿಗ್ಗೆ ಸುಮಾರು 2.30ರ ಸಮಯದಲ್ಲಿ ತೀರ್ಥಹಳ್ಳಿಯ ಬಾಳೇಬೈಲಿನಲ್ಲಿರುವ ಕೃಷ್ಣಮೂರ್ತಿ ಅವರ ಅಂಗಡಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ಅಂಗಡಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಘಟನೆಯಲ್ಲಿ ಅಂಗಡಿಯಲ್ಲಿದ್ದ ಸುಮಾರು 4 ರಿಂದ 5 ಲಕ್ಷ ಮೌಲ್ಯದ ಸಾಮಾನುಗಳು ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ.


ಘಟನಾ ಸ್ಥಳಕ್ಕೆ ಆಗಮಿಸಿರುವ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ. ಎಸ್ಪಿ ಕೌಶಲೇಂದ್ರ ಕುಮಾರ್ ಮತ್ತು ತೀರ್ಥಹಳ್ಳಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ತೀರ್ಥಹಳ್ಳಿ ಪಟ್ಟಣದಲ್ಲಿ ಈಗಾಗಲೇ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಪಡೆಯನ್ನು ನಿಯೋಜಿಸಲಾಗುತ್ತದೆ. ಅಂಗಡಿಗೆ ಬೆಂಕಿ ಬಿದ್ದ ಪ್ರಕರಣದ ನಂತರ ಯಾವುದೇ ಹಿಂಸಾಚಾರ ಸಂಭವಿಸದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತೀರ್ಥಹಳ್ಳಿಯಲ್ಲಿ ಅಪ್ರಾಪ್ತ ಬಾಲಕಿ ನಂದಿತಾ ನಿಗೂಢ ಸಾವಿನ ಪ್ರಕರಣ ಸಂಬಂಧಿಸಿದಂತೆ ಮೂರು ದಿನಗಳ ಹಿಂದೆಯಷ್ಟೇ ವರದಿ ನೀಡಿದ್ದ ಸಿಐಡಿ ಅಧಿಕಾರಿಗಳು, ನಂದಿತಾ ಸಾವು ಕೊಲೆಯಲ್ಲ ಆತ್ಮಹತ್ಯೆ ಎಂದು ತಿಳಿಸಿತ್ತು ಈ ಹೇಳಿಕೆಗೆ ಸಂಬಂಧಿಸಿದಂತೆ ತೀರ್ಥಹಳ್ಳಿಯಲ್ಲಿ ಹಿಂಸಾಚಾರ ಭುಗಿಲೆದ್ದು 15 ದಿನಗಳ ಕಾಲ ಪೊಲೀಸ್ ನಿಷೇದಾಜ್ಞೆ ಹೊರಡಿಸಿದ್ದರು.
