ಬಂಟ್ವಾಳ: ಸಂಘರ್ಷ ಇಲ್ಲದೆ ಸಾಮಾಜಿಕ ಕ್ರಾಂತಿ ಮಾಡಿದ ಬ್ರಹ್ಮಶ್ರೀ ನಾರಾಯಣಗುರುಗಳು ಜಗತ್ತಿನ ಗಮನ ಸೆಳೆದಿದ್ದಾರೆ. ಅವರ ಹೆಸರಲ್ಲಿ ಪುಂಜಾಲಕಟ್ಟೆಯಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡ ಬ್ರಹ್ಮಶ್ರೀ ನಾರಾಯಣಗುರು ವಸತಿ ಶಾಲೆಗೆ ಈಗ ಬಾಡಿಗೆ ಕಟ್ಟಡದಲ್ಲಿರುವ ವಿದ್ಯಾರ್ಥಿಗಳನ್ನು ಹಿಂದುಳಿದವರ್ಗ ಇಲಾಖಾಧಿಕಾರಿಗಳು ಯಾವುದೇ ವಿಳಂಬ ಧೋರಣೆ ತಾಳದೆ ತಕ್ಷಣ ಸ್ಥಳಾಂತರಿಸಲು ಕ್ರಮಕೈಗೊಳ್ಳಬೇಕು,ಈ ವಸತಿ ಶಾಲೆಯಲ್ಲಿ ಧ್ಯಾನಮಂದಿವನ್ನೂ ನಿರ್ಮಿಸುವ ಚಿಂತನೆಯ ಇದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಹೇಳಿದ್ದಾರೆ.

ಬಿ.ಸಿ.ರೋಡಿನ ಗಾಣದಪಡ್ಪುವಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಭಾನುವಾರ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಪುಂಜಾಲಕಟ್ಟೆ ಶ್ರೀ ನಾರಾಯಣಗುರು ವಸತಿ ಶಾಲೆ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಗಾಣದಪಡ್ಪು, ಯುವವಾಹಿನಿ ಬಂಟ್ವಾಳ ಘಟಕ ಹಾಗೂ ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿ ಸಹಯೋಗದೊಂದಿಗೆ ಬ್ರಹ್ಮಶ್ರೀ ನಾರಾಯಣಗುರುಗಳ ೧೭೧ನೇ ಜನ್ಮದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದಬಂಟ್ವಾಳ ಪುರಸಭಾ ಅಧ್ಯಕ್ಷ ಬಿ.ವಾಸು ಪೂಜಾರಿ ಮಾತನಾಡಿ, ಗುರುಗಳು ನೀಡಿದ ಬೆಳಕಿನ ಪಥದಲ್ಲಿ ನಾವೆಲ್ಲರೂ ಸಾಗೋಣ ಎಂದರು.ಶ್ರೀನಾರಾಯಣಗುರು ವಸತಿ ಶಾಲೆ ಮುಖ್ಯೋಪಾಧ್ಯಾಯ ಸಂತೋಷ್ ಕುಮಾರ್ ಗುರು ಸಂದೇಶ ನೀಡಿ ಮೌನ ಕ್ರಾಂತಿಯ ಮೂಲಕ ಅಸಮಾನತೆ ವಿರುದ್ಧ ಹೋರಾಟ ಮಾಡಿದವರು ಗುರುಗಳು, ಕ್ರಾಂತಿ ಮೂಲಕ ಶಾಂತಿ ಮಂತ್ರ ಪಠಿಸಿದವರು ಎಂದರು.
ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಬೇಬಿ ಕುಂದರ್ ಮಾತನಾಡಿ ವಿದ್ಯಾರ್ಥಿಗಳು ಗುರಿ ತಲುಪಲು ನಾರಾಯಣಗುರುಗಳ ಸಂದೇಶ ಸಹಕಾರಿ ಎಂದು ಶುಭ ಹಾರೈಸಿದರು.ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಯುವವಾಹಿನಿ ಬಂಟ್ವಾಳ ಅಧ್ಹಕ್ಷ ನಾಗೇಶ್ ಪೂಜಾರಿ ನೈಬೈಲು, ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿ ಅಧ್ಯಕ್ಷೆ ರಾಗಿಣಿ ಮಾಧವ ಚಂಡ್ತಿಮಾರ್ ಉಪಸ್ಥಿತರಿದ್ದರು.
ಉಪತಹಸೀಲ್ದಾರ್ ನವೀನ್ ಬೆಂಜನದವು ಅವರು ಪ್ರಸ್ತಾವಿಸಿ,ಸ್ವಾಗತಿಸಿದರು.ಯುವವಾಹಿನಿ ನಿಕಟಪೂರ್ವ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರ್ವಹಿಸಿದರು.
