ಬಂಟ್ವಾಳ: ಕೇಂದ್ರದ ‘ವಿಬಿ-ಜಿ ರಾಮ್ ಜಿ ಯೋಜನೆ’ ಕುರಿತು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಗುರುವಾರದ ದಿನಪತ್ರಿಕೆಗಳಲ್ಲಿ ಬಹಿರಂಗ ಜಾಹೀರಾತು ನೀಡಿರುವ ಕ್ರಮವನ್ನು ಖಂಡಿಸಿರುವ ಬಿಜೆಪಿ ಮುಖಂಡ,ಬಂಟ್ವಾಳ ತಾ.ಪಂ.ಮಾಜಿ ಸದಸ್ಯ ಪ್ರಭಾಕರ ಪ್ರಭು ಅವರು ಈ ಕುರಿತು ಸಂಬಂಧ ಇಲಾಖಾಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಕರ್ನಾಟಕ ಸರಕಾರದ ಮುಖ್ಯಕಾರ್ಯದರ್ಶಿಯವರಿಗೆ ಲಿಖಿತ ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ಕೇಂದ್ರ ಸರಕಾರವು ಕೆಲವೊಂದು ತಿದ್ದುಪಡಿಯೊಂದಿಗೆ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ವಿವಿಧ ಭಂಗಿಯಲ್ಲಿ ಮಹಾತ್ಮ ಗಾಂಧೀಜಿಯವರ ಭಾವಚಿತ್ರ ಬಳಸಿಕೊಂಡು ಯೋಜನೆಯ ಬಗ್ಗೆ ಜನರಿಗೆ ಅಪನಂಬಿಕೆ ಬರುವಂತೆ ರಾಜ್ಯದ ಎಲ್ಲಾ ದಿನಪತ್ರಿಕೆಗಳಲ್ಲಿ ಸರಕಾರದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ನೀಡಿರುವ ಜಾಹೀರಾತು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿನ ಜನರ ಭಾವನೆಗಳಿಗೆ ಧಕ್ಕೆ ತಂದಿದೆಯಲ್ಲದೆ ಸರಕಾರದ ಬೊಕ್ಕಸದಿಂದ ಈ ಜಾಹೀರಾತು ನೀಡಿರುವುದು ಸರಿಯಲ್ಲ ಎಂದು ಮನವಿಯಲ್ಲಿ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ರಾಜಕೀಯ ನಾಯಕರು ಯಾವುದೇ ಸರಕಾರದ ಯೋಜನೆಗಳ ಬಗ್ಗೆ ಪರ-ವಿರೋಧ ಮಾತಾನಾಡುವುದು , ಜಾಹೀರಾತು ನೀಡುವುದು ಸಹಜ ಪ್ರಕ್ರಿಯೆಯಾಗಿದೆ ಆದರೆ ಜನರ ತೆರಿಗೆಯ ಹಣದಿಂದ ವೇತನ ಪಡೆಯುತ್ತಿರುವ ಇಲಾಖೆಯ ಅಧಿಕಾರಿಗಳು ಇಲಾಖೆಯ ಹೆಸರಿನಲ್ಲಿ ಕೇಂದ್ರ ಸರಕಾರದ ಯೋಜನೆಯ ವಿರುದ್ದ ಜಾಹೀರಾತು ನೀಡಿರುವುದು ಸರಿಯಲ್ಲ, ಈ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಪತ್ರದಲ್ಲಿ ಪ್ರಭು ಒತ್ತಾಯಿಸಿದ್ದಾರೆ.
