ಬಂಟ್ವಾಳ:ಸರಕಾರದ ಮಹತ್ವಕಾಂಕ್ಷೆಯ ಪಂಚಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮೀ ಯೋಜನೆ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ತಪ್ಪು ಸಂದೇಶದ ಬಗ್ಗೆ ಫಲಾನುಭವಿಗಳ್ಯಾರು ಗೊಂದಲಕ್ಕೊಳಗಾಗಬೇಡಿ, ಈ ಕಾರ್ಯಕ್ರಮ ಮುಂದುವರಿಯಲಿದ್ದು, ಯೋಜನೆಯ ಫಲಾನುಭವಿಗಳ ಖಾತೆಗೆ ನೇರ ಹಣ ಬರುತ್ತದೆ. ಫಲಾನುಭವಿಗಳು ಮತ್ತೆ ಅರ್ಜಿ ಹಾಕುವ ಅವಶ್ಯಕತೆ ಇಲ್ಲ ಎಂದು ಪಂಚಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಬಂಟ್ವಾಳ ತಾಲೂಕು ಅಧ್ಯಕ್ಷೆ ಜಯಂತಿ ವಿ.ಪೂಜಾರಿ ಹೇಳಿದ್ದಾರೆ.

ಪಂಚಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆ ಅತೀ ಮುಖ್ಯವಾಗಿದ್ದು, ಇದರ ಅನುಷ್ಠಾನದಲ್ಲಿ ಬಂಟ್ವಾಳ ತಾಲೂಕು ಮುಂದಿದ್ದು, ಕೆಲಸದ ಒತ್ತಡದ ನಡುವೆಯು ತಾಲೂಕು ಶಿಶು ಅಭಿವೃದ್ಧಿ ಯೋಜನೆ ಇಲಾಖೆಯ ಅಧಿಕಾರಿ, ಸಿಬ್ಬಂದಿ ವರ್ಗ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮುಖ್ಯ ಕಾರಣಕರ್ತರಾಗಿದ್ದು,ಅವರಿಗೆ ಅಭಿನಂದನೆ ಸಲ್ಲಿಸಿದರು.
ಇದೇ ವೇಳೆ ಗೃಹಲಕ್ಷ್ಮೀ ಯೋಜನೆ ಹಣದಿಂದ ವಿಶೇಷ ಸಾಧನೆ ಮಾಡಿದ ರವಿಕಲಾ ನರಿಕೊಂಬು,ಪ್ಲೇವಿಡಿಸೋಜ ಅಮ್ಟಾಡಿ ಹಾಗೂ ರೇಣುಕಾ ಬಡಕಬೈಲ್ ಅವರನ್ನು ಸನ್ಮಾನಿಸಲಾಯಿತು.

ಅತಿಥಿಯಾಗಿ ಭಾಗವಹಿಸಿದ್ದ ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಬೇಬಿ ಕುಂದರ್ ಮಾತನಾಡಿ ಗೃಹಲಕ್ಷ್ಮಿ ಯೋಜನೆ ಯಶಸ್ವಿಯ ಶ್ರೇಯಸ್ಸು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಬಂದಿ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಸಲ್ಲುತ್ತದೆ ಎಂದರು.
ಶಿಶು ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಶ್ರೀಧರ್ ಮಾತನಾಡಿ, ಬಂಟ್ವಾಳ ತಾಲೂಕಿನಲ್ಲಿ ಗೃಹಲಕ್ಷ್ಮಿ ಯೋಜನೆ ಸದುಪಯೋಗಪಡಿಸಿಕೊಂಡಿದ್ದು, ಮಹಿಳೆಯರಲ್ಲಿ ಆತ್ಮವಿಶ್ವಾಸ ಬಂದಿದೆ. ಅರ್ಹರಿಗೆ ಯೋಜನೆ ತಲುಪಬೇಕು ಎಂಬ ಹಿನ್ನೆಲೆ ಪರಿಷ್ಕರಣೆ ಮಾಡಲಾಗುತ್ತಿದೆ. ಈ ಯೋಜನೆ ನಿರಂತರವಾಗಿ ಪ್ರಗತಿಯಲ್ಲಿದ್ದು, ದುಡ್ಡು ಯಾರಿಗಾದರೂ ಬಾರರ ಸಮಸ್ಯೆಗಳು ಇದ್ದಲ್ಲಿ ಗಮನಕ್ಕೆ ತನ್ನಿ ಎಂದರು.
ಬಂಟ್ವಾಳ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸಚಿನ್ ಕುಮಾರ್ ಮಾತನಾಡಿ ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆ ಆರ್ಥಿಕವಾಗಿ ಸ್ವಾವಲಂಬಿಯಾಗಿದ್ದು ಕುಟುಂಬದ ಯಜಮಾನಿ ಎಂಬ ಪಟ್ಟ ದೊರಕಿದೆ ಎಂದರು.
ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಾಜಿ ಸಚಿವ ಬಿ.ರಮಾನಾಥ ರೈ ಗಿಡ ನೆಟ್ಟು ಶುಭ ಹಾರೈಸಿದರು.
ಸಂಭ್ರಮೋತ್ಸವದ ಪ್ರಯುಕ್ತ ಬಿ.ಸಿ.ರೋಡಿನಲ್ಲಿರುವ ತಾಲೂಕುಮಟ್ಟದ ಡಾ.ಬಿ.ಆರ್. ಅಂಬೇಡ್ಕರ್ ಭವನ ಆವರಣದಲ್ಲಿ ಗಿಡ ನೆಡಲಾಯಿತು.
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರಾದ ಕೃಷ್ಣಪ್ಪ ಪೂಜಾರಿ, ಸಿರಾಜ್ ಮದಕ, ಸತೀಶ್ ಕುಮಾರ್ ನಾವೂರು, ಚಂದ್ರಶೇಖರ ಆಚಾರ್ಯ ಉಪಸ್ಥಿತರಿದ್ದರು.
ಸಿಡಿಪಿಒ ಕಚೇರಿ ಮೇಲ್ವಿಚಾರಕಾದ ನೀತಾ ಕುಮಾರಿ ಡಿ, ಶೋಭಾ ಎಂ ಮತ್ತು ಮುಬೀನಾ ಬಾನು ಪರಿಚಯಿಸಿದರು. ಯೋಜನೆ ಯಶಸ್ಸಿಗೆ ತಾಂತ್ರಿಕವಾಗಿ ಸಹಕರಿಸಿದ ಗೌತಮ್ ಮತ್ತು ಯಶವಂತ್ ಅವರನ್ನು ಸನ್ಮಾನಿಸಲಾಯಿತು. ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮುಮ್ತಾಜ್ ಸ್ವಾಗತಿಸಿದರು. ಮೇಲ್ವಿಚಾರಕಿ ಶೋಭಾ ಎಂ. ವಂದಿಸಿದರು. ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಾಲಿನಿ ಕಾರ್ಯಕ್ರಮ ನಿರ್ವಹಿಸಿದರು.

