ಬಂಟ್ವಾಳ: ಕಲ್ಲಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘವು ಪ್ರಸಕ್ತ ಸಾಲಿನಲ್ಲಿ 8.56 ಕೋ.ರೂ. ವಾರ್ಷಿಕ ವ್ಯವಹಾರ ನಡೆಸಿ, 13 ಲಕ್ಷ ರೂ. ನಿವ್ವಳ ಲಾಭ ಗಳಿಸಿದ್ದು,ಸದಸ್ಯರಿಗೆ ಶೇ. 20 ಡಿವಿಡೆಂಡ್ ವಿತರಿಸಲು ನಿರ್ಧರಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಕೆ. ಪದ್ಮನಾಭ ಕೊಟ್ಟಾರಿ ಹೇಳಿದರು.

ಕಲ್ಲಡ್ಕ ಶ್ರೀರಾಮ ಮಂದಿರದ ಮಾಧವ ಸಭಾಭವನದಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಘವು 66.26 ಲಕ್ಷ ದುಡಿಯುವ ಬಂಡವಾಳ , 5,19,594.51 ರೂ.ವಿನ ಚರಾಸ್ತಿ ಹಾಗೂ 18,16,491.20 ರುಇ.ವಿನ ಸ್ಥಿರಾಸ್ತಿ ಹೊಂದಿದೆ. ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲು 9.80 ಲಕ್ಷ ರೂ. ಪಾಲು ಬಂಡವಾಳ ಹೊಂದಿದೆ. ಎಂದರು.
ಸಂಘವು ಲೆಕ್ಕಪರಿಶೋಧನೆಯಲ್ಲಿ ‘ಎ’ ಶ್ರೇಣಿ ಪಡೆದುಕೊಂಡಿದ್ದು, ಪ್ರತಿವರ್ಷ ಹಾಲು ಉತ್ಪಾದಕರಿಗೆ ಬೋನಸ್ ನೀಡುವುದರ ಜತೆಗೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿವಿಧ ಪ್ರೋತ್ಸಾಹಕ ಬಹುಮಾನಗಳನ್ನು ನೀಡಲಾತ್ತಿದೆ. ಹಾಲು ಉತ್ಪಾದನೆಯನ್ನು ಇನ್ನಷ್ಟು ಹೆಚ್ಚಿಸುವ ಮೂಲಕ ಕೃಷಿಕರಿಗೆ ಹೆಚ್ಚಿನ ಆರ್ಥಿಕ ಲಾಭ ದೊರೆಯುವಂತೆ ಸಹಕಾರ ನೀಡಬೇಕು ಎಂದು ಅವರು ಕೋರಿದರು.
ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಉಪವ್ಯವಸ್ಥಾಪಕಿ ಜಾನೆಟ್ ರೊಸಾರಿಯೋ ಮಾತನಾಡಿ, ಹಾಲು ಉತ್ಪಾದಕರಿಗೆ ಸಂಘದ ಮೂಲಕ ದೊರೆಯುವ ಸೌಲಭ್ಯಗಳು ಹಾಗೂ ಹೈನುಗಾರಿಕೆಗೆ ಸಂಬಂಧಿಸಿದ ಮಾಹಿತಿ ಹಾಗೂ ಪಶುವೈದ್ಯಾಧಿಕಾರಿ ಡಾ. ಚರಣ್ ಅವರು ಪಶುಸಂಗೋಪನೆ ಹಾಗೂ ಹೈನುಗಾರಿಕೆ ಕುರಿತು ಮಾಹಿತಿ ನೀಡಿದರು.
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಅಂತಿಮ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳನ್ನು ಈ ಸಂದರ್ಭದಲ್ಲಿ ಪುರಸ್ಕರಿಸಲಾಯಿತು.ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೇಶ್ ಕೆ. ವರದಿ ವಾಚಿಸಿದರು. ಉಪಾಧ್ಯಕ್ಷ ರತ್ನಾಕರ ಭಂಡಾರಿ, ನಿರ್ದೇಶಕರಾದ ರತ್ನಾಕರ ಪ್ರಭು, ಜಯರಾಮ ಕೊಟ್ಟಾರಿ, ಗೋಪಾಲ ನಾಯ್ಕ, ಪುಷ್ಪರಾಜ, ನಾರಾಯಣ ಕೋಟ್ಯಾನ್, ಚೇತನ್, ಗುರುವಪ್ಪ ಗೌಡ, ಮಿಥುನ್, ವನಿತಾ ಹಾಗೂ ವಿಜಯಲಕ್ಷ್ಮೀ ಉಪಸ್ಥಿತರಿದ್ದರು. ಸಂಘದ ಸಿಬ್ಬಂದಿಗಳಾದ ರವಿ ಮತ್ತು ರೇವತಿ ಸಹಕರಿಸಿದರು
