ಪುತ್ತೂರು: ಅಕ್ರಮ ಮದ್ಯ ಮಾರಾಟ ದಂಧೆ ನಡೆಸುತ್ತಿದ್ದ ಮನೆಗೆ ದಾಳಿ ನಡೆಸಿದ ಪೊಲೀಸರಿಗೆ ಕತ್ತಿ ತೋರಿಸಿ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಹಿನ್ನೆಲೆಯಲ್ಲಿ ಕೊಲ ಗ್ರಾಮದ ಆತೂರು ನಿವಾಸಿ ಮುತ್ತಪ್ಪ ಪೂಜಾರಿ(52) ಹಾಗೂ ಈತನ ಪತ್ನಿ ಹೇಮಾವತಿ(38) ಎಂಬವರನ್ನು ಬಂಧಿಸಲಾಗಿದೆ.
ಮುತ್ತಪ್ಪ ಪೂಜಾರಿ ಮನೆಯಲ್ಲಿ ಅಕ್ರಮ ಮದ್ಯ ಮಾರಾಟವಾಗುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧಾರದಲ್ಲಿ ಕಡಬ ಎಸ್.ಐ ಯೋಗೀಶ್ ಕುಮಾರ್ ನೇತತ್ವದ ತಂಡ ಭಾನುವಾರ ರಾತ್ರಿ ದಾಳಿ ನಡೆಸಿದೆ. ಈ ಸಂದರ್ಭದಲ್ಲಿ ಮನೆಯಲ್ಲಿ ದಾಸ್ತಾನಿರಿಸಿದ್ದ 32 ಮದ್ಯದ ಬಾಟ್ಲಿ, ಮದ್ಯ ಮಾರಾಟದಿಂದ ಸಂಗ್ರಹವಾದ 9,100 ರೂ. ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ದಸ್ತಗಿರಿ ಮಾಡಲು ಮುಂದಾದ ಪೊಲೀಸರಿಗೆ ಕತ್ತಿ ತೋರಿಸಿ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದು, ಮಹಿಳಾ ಪೊಲೀಸ್ ಸಿಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಕರ್ತವ್ಯಕ್ಕೆ ಅಡ್ಡಿ ಹಾಗೂ ಅಕ್ರಮ ಮದ್ಯಮಾರಾಟ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
