ಬೆಂಗಳೂರು: ರಾಜ್ಯ ರಾಜಕಾರಣಕ್ಕೆ ಮರಳಲು ಅವಕಾಶ ನೀಡುವಂತೆ ಕೇಂದ್ರ ಬಿಜೆಪಿ ನಾಯಕರನ್ನು ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ. ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿ ವಿಧಾನ ಸಭೆ ಇಲ್ಲವೇ ಪರಿಷತ್ನ ಮೂಲಕ ಸದಸ್ಯರಾಗಲು ಅವಕಾಶ ಮಾಡಿಕೊಡಿ. ಮುಂಬರುವ ವಿಧಾನ ಸಭಾ ಚುನಾವಣೆಯ ವೇಳೆಗೆ ರಾಜ್ಯದಲ್ಲಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸಿ ಅಧಿಕಾರಕ್ಕೆ ತರಲು ಹೋರಾಟ ನಡೆಸುತ್ತೇನೆ. ವಿಧಾನ ಸಭೆಯಲ್ಲಿ ಪ್ರತಿಪಕ್ಷದ ಸ್ಥಾನ ಇಲ್ಲವೇ ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನ ನೀಡಿ. ನನಗೆ ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನವೂ ಬೇಡ ಎಂದಿದ್ದಾರೆ. ಇತ್ತೀಚೆಗೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರು ಎರಡು ದಿನಗಳ ಕಾಲ ಬೆಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ತಮ್ಮ ನಿರ್ಧಾರಗಳನ್ನು ಅವರಿಗೆ ತಿಳಿಸಿದ್ದಾರೆ.

ಆದರೆ ಕೇಂದ್ರದಿಂದ ಯಾವುದೇ ರೀತಿಯ ಭರವಸೆಗಳು ದೊರೆತಿಲ್ಲ. ಇಲ್ಲಿನ ವಾತಾವರಣವನ್ನು ಗಮನಿಸಿದ ಯಡಿಯೂರಪ್ಪ ಪಕ್ಷ ಅಧಿಕಾರಕ್ಕೆ ಬಂದರೆ ಮತ್ತೆ ಮುಖ್ಯಮಂತ್ರಿಯಾಗಬಹುದೆಂಬ ಆಶಾಭಾವನೆಯಿಂದ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲು ಪ್ರಯತ್ನ ಮಾಡಿದ್ದಾರೆ. ಕೇಂದ್ರದಲ್ಲಿ ಸಚಿವ ಸ್ಥಾನ ದೊರೆಯಬಹುದೆಂಬ ದೂರದೃಷ್ಟಿಯಿಂದ ಕಳೆದ ಲೋಕಸಭಾ ಚುನಾವಣೆಯಲ್ಲಿ ಸಂಸತ್ ಪ್ರವೇಶಿಸಿದ್ದರು. ಆದರೆ ಮೋದಿಯವರು ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಇವರಿಗೆ ಮಂತ್ರಿ ಮಂಡಲದಲ್ಲಿ ಅವಕಾಸ ನೀಡದಿರುವುದು ಬೇಸರ ತಂದಿದ್ದು, ಇಂತಹ ನಿರ್ಧಾರಕ್ಕೆ ಬಂದಿದ್ದಾರೆ.
