ಸುದ್ದಿ9 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 10 ವರ್ಷಗಳಲ್ಲಿ 57 ಬಾಲ್ಯ ವಿವಾಹ ಪ್ರಕರಣಗಳು ಪತ್ತೆಯಾಗಿ ಅಂತಹ ವಿವಾಹವನ್ನು ತಡೆಹಿಡಿಯಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಬಾಲ್ಯ ವಿವಾಹ ತಡೆಗಟ್ಟುವ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

21 ವರ್ಷಕ್ಕಿಂತ ಕೆಳಗಿನ ಹುಡುಗ ಮತ್ತು 18 ವರ್ಷಕ್ಕಿಂತ ಕೆಳಗಿನ ಹುಡುಗಿಯರ ಮದುವೆಯನ್ನು ಬಾಲ್ಯ ವಿವಾಹ ಎಂದು ಪರಿಗಣಿಸಲಾಗುತ್ತದೆ. ಇಂತಹ ಮದುವೆಗಳನ್ನು ತಡೆಗಟ್ಟಲು ಬಾಲ್ಯ ವಿವಾಹ ನಿಷೇಧಾಧಿಕಾರಿಗಳನ್ನು ಜಿಲ್ಲಾ ಮಟ್ಟ,ತಾಲೂಕು ಮಟ್ಟದಲ್ಲಿ ನೇಮಿಸಲಾಗಿದೆ.

ಗ್ರಾಮ ಮಟ್ಟದಲ್ಲಿ ಪಿಡಿಒ, ಪೊಲೀಸ್ ಎಸ್‌ಐ, ಶಾಲಾ ಮುಖ್ಯ ಶಿಕ್ಷಕ, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಿಗರನ್ನು ಬಾಲ್ಯವಿವಾಹ ನಿಷೇಧ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ ಎಂದು ಅವರು ಹೇಳಿದರು.

ಪುತ್ತೂರು- 18, ಬಂಟ್ವಾಳ- 17, ಮಂಗಳೂರು- 11, ಸುಳ್ಯ- 10, ಬೆಳ್ತಂಗಡಿ ತಾಲೂಕಿನಲ್ಲಿ 1 ಬಾಲ್ಯ ವಿವಾಹ ತಡೆ ಹಿಡಿಯಲಾಗಿದೆ. ಸಾರ್ವಜನಿಕರಲ್ಲಿ ಬಾಲ್ಯವಿವಾಹ ನಿಷೇಧ ಬಗ್ಗೆ ಅರಿವು ಮೂಡಿಸಲು ಜಾಗೃತಿ ಕಾರ‌್ಯಕ್ರಮ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ವಿವಾಹ ಆಮಂತ್ರಣ ಪತ್ರಿಕೆ ಮುದ್ರಿಸುವ ಎಲ್ಲ ಪ್ರಿಂಟಿಂಗ್ ಪ್ರೆಸ್ ಹಾಗೂ ಡಿಟಿಪಿ ಕೇಂದ್ರಗಳು ಆಮಂತ್ರಣ ಮುದ್ರಿಸುವ ಮೊದಲು ಕಡ್ಡಾಯವಾಗಿ ವಧೂವರರ ವಯಸ್ಸಿನ ಬಗ್ಗೆ ದಾಖಲೆಗಳನ್ನು ಪಡೆದ ಬಳಿಕವಷ್ಟೇ ಆಮಂತ್ರಣ ಪತ್ರಿಕೆ ಮುದ್ರಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ಕಲ್ಯಾಣ ಮಂಟಪ ಮತ್ತು ಹಾಲ್‌ಗಳು ವಿವಾಹಕ್ಕೆ ಅನುಮತಿ ನೀಡುವ ಮುಂಚೆ ವಧೂವರರ ವಯಸ್ಸನ್ನು ಖಚಿತ ಪಡಿಸಿಕೊಳ್ಳಬೇಕು ಎಂಬ ಸೂಚನೆ ನೀಡಲಾಗಿದೆ. ಬಾಲ್ಯವಿವಾಹ ನಿಷೇಧ ಕಾಯಿದೆ ಬಗ್ಗೆ ತಾಲೂಕು ಮಟ್ಟದಲ್ಲಿ ಎಲ್ಲ ಧಾರ್ಮಿಕ ಮುಖಂಡರಿಗೆ ಮಾಹಿತಿ ಕಾರ್ಯಾಗಾರ ಏರ್ಪಡಿಸಲಾಗುವುದು ಎಂದರು.

ಸಾಮೂಹಿಕ ವಿವಾಹ ಏರ್ಪಡಿಸುವ ಮೊದಲು ಸಂಘಟಕರು ತಹಸೀಲ್ದಾರ್‌ರಿಂದ ಅನುಮತಿ ಪಡೆಯುವುದು ಕಡ್ಡಾಯ. ಅಂತಹ ವಿವಾಹದಲ್ಲಿ ವಧು ವರರ ವಯಸ್ಸಿನ ದಾಖಲೆ ಇಟ್ಟುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಬಾಲ್ಯ ವಿವಾಹಗಳು ನಡೆಯುತ್ತಿರುವ ಬಗ್ಗೆ ಮಾಹಿತಿ ದೊರೆತಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟವರಿಗೆ ತಿಳಿಸಬೇಕು. ಬಾಲ್ಯ ವಿವಾಹ ನಿಷೇಧದ ಅಧಿಕಾರಿಗಳು ಕರ್ತವ್ಯದಲ್ಲಿ ವಿಫಲವಾದರೆ ಅಥವಾ ನಿರ್ಲಕ್ಷ್ಯ ತೋರಿದಲ್ಲಿ ಅಂಥವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಗರ್ಟ್ರೂಡ್ ವೇಗಸ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕಷ್ಣ, ಡಿಡಿಪಿಐ ವಾಲ್ಟರ್ ಡಿ.ಮೆಲ್ಲೊ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಉಸ್ಮಾನ್, ಜನಶಿಕ್ಷಣ ಟ್ರಸ್ಟ್‌ನ ಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *