ಬೆಂಗಳೂರು: ಭಾನುವಾರ ಬೆಂಗಳೂರಿನಲ್ಲಿ ನಡೆದ ಆಪ್ ಸಮಾವೇಶದಲ್ಲಿ ನರೇಂದ್ರ ಮೋದಿ ಮತ್ತು ಬಿಜೆಪಿಯ ಇತರ ನಾಯಕರ ವಿರುದ್ಧ ಆಧಾರರಹಿತ ಮತ್ತು ಮಾನಹಾನಿಕರ ಆರೋಪಗಳನ್ನು ಮಾಡಿರುವ ಆಪ್ ನಾಯಕ ಅರವಿಂದ್ ಕೇಜ್ರಿವಾಲ್ ವಿರುದ್ಧ ಚುನಾವಣಾ ನೀತಿಸಂಹಿತೆ ಉಲ್ಲಂಘನೆ ದೂರು ದಾಖಲಿಸಲಾಗಿದೆ. ಈ ಕುರಿತು ದೂರು ನೀಡಿರುವ ಬಿಜೆಪಿ ಮುಖಂಡ ಸುರೇಶ್ ಕುಮಾರ್ ಕೇಜ್ರಿವಾಲ್ ಜನರನ್ನು ಬಿಜೆಪಿ ವಿರುದ್ಧ ಎತ್ತಿಕಟ್ಟುವ ಉದ್ದೇಶದಿಂದ ನರೇಂದ್ರ ಮೋದಿ ಬಗ್ಗೆ ಇಲ್ಲಸಲ್ಲದ ಆಧಾರರಹಿತ ಮತ್ತು ಮಾನಹಾನಿಕರ ಆರೋಪಗಳನ್ನು ಮಾಡಿದ್ದಾರೆ.
ಅದಲ್ಲದೆ ರಾಜ್ಯದ ಇತರ ನಾಯಕರ ಮೇಲೂ ಅತ್ಯಂತ ಕೀಳುಮಟ್ಟದ ಪದಗಳನ್ನು ಬಳಸಿದ್ದಾರೆ ಇದು ಚುನಾವಣಾ ನೀತಿಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ. ನನ್ನ ಮೇಲೆ ಮಾನಹಾನಿ ದೂರು ದಾಖಲಾದರೂ ಚಿಂತೆಯಿಲ್ಲ ಎಂದು ಕೇಜ್ರಿವಾಲ್ ಹೇಳಿರುವುದು ಅವರಿಗೆ ದೇಶದ ಸಂವಿಧಾನದ ಮೇಲಿರುವ ಗೌರವವನ್ನು ಸೂಚಿಸುತ್ತದೆ. ಅವರಿಗೆ ನಮ್ಮ ದೇಶದ ಕಾನೂನು ಮತ್ತು ಸಂವಿಧಾನದ ಮೇಲೆ ಎಳ್ಳಷ್ಟೂ ಗೌರವವಿಲ್ಲ ಎಂದು ಸುರೇಶ್ ಟೀಕಿಸಿದ್ದಾರೆ.

