
ಹುಬ್ಬಳ್ಳಿ ಮಾ.23: ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಹುಬ್ಬಳ್ಳಿಯ ದೇಶಪಾಂಡೆನಗರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಗೋವಿಂದ ಕಾರಜೋಳ ಸೇರಿದಂತೆ ಹಲವು ಬಿಜೆಪಿಯ ಹಿರಿಯ ಮುಖಂಡರ ಸಮ್ಮುಖದಲ್ಲಿ ಮುತಾಲಿಕ್ ಬಿಜೆಪಿಗೆ ಸೇರ್ಪಡೆಗೊಂಡರು. ನಂತರ ಮಾತನಾಡಿದ ಮುತಾಲಿಕ್, ಹಿಂದುತ್ವದ ಪ್ರಾಮಾಣಿಕತೆ,ಹಿಂದೂ ರಾಷ್ಟ್ರ ನಿರ್ಮಾಣ, ರಾಷ್ಟ್ರದ ಭದ್ರತೆ ದೃಷ್ಟಿಯಿಂದ ಹಾಗೂ ಶ್ರೇಷ್ಠ ವ್ಯಕ್ತಿ ನರೇಂದ್ರ ಮೋದಿ ಅವರನ್ನ ಪ್ರಧಾನಿ ಮಾಡುವ ಉದ್ದೇಶದಿಂದ ಬಿಜೆಪಿಗೆ ಸೇರ್ಪಡೆಗೊಂಡಿದ್ದೇನೆ ಎಮದರು. ಅಲ್ಲದೆ, ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಈಶ್ವರಗೌಡ ಪಾಟೀಲ್ ಸೇರಿದಂತೆ ಹಲವು ಮುಖಂಡರು ನನ್ನೊಟ್ಟಿಗೆ ಬಂದಿದ್ದಾರೆ. ಹೀಗಾಗಿ, ಶ್ರೀರಾಮಸೇನೆ ಕೂಡಾ ಅಧಿಕೃತವಾಗಿ ಬಿಜೆಪಿಯಲ್ಲಿ ವಿಲೀನವಾಗಿದೆ ಎಂದರು.

