ಚಿಕ್ಕಮಗಳೂರು: ನನ್ನ ರಾಜಕೀಯ ಗುರು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಿಜೆಪಿ ಪಕ್ಷ ನನ್ನ ಎರಡು ಕಣ್ಣುಗಳಿದ್ದಂತೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ ಸಂವಾದ ಕಾರ್ಯಕ್ರಮದಲ್ಲಿ ಹೇಳಿದ್ದಾರೆ. ಚಿಕ್ಕಮಗಳೂರಿನ ಪ್ರೆಸ್ ಕ್ಲಬ್ನಲ್ಲಿ ಮಾತನಾಡಿದ ಶೋಭಾ, ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಸಮಸ್ಯೆಗಳನ್ನು ಅಧ್ಯಯನ ಮಾಡಿ ಅವುಗಳ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು. ಉಡುಪಿಯಲ್ಲಿರುವಂತೆ ಅಡಿಕೆಗೆ ಹಳದಿ ರೋಗದ ಸಮಸ್ಯೆ ಚಿಕ್ಕಮಗಳೂರಿನಲ್ಲೂ ಇದೆ.
ಆದರೆ ಇಲ್ಲಿರುವ ಕಾಫಿ ಬೆಳೆಗಾರರ ಸಮಸ್ಯೆ ಉಡುಪಿಯಲ್ಲಿಲ್ಲ. ಅದು ನನಗೆ ಹೊಸದು. ಅದರ ಬಗ್ಗೆ ಸೂಕ್ಷ್ಮವಾಗಿ ಸಮಾಲೋಚಿಸಿ ಸಮಸ್ಯೆ ಪರಿಹಾರಕ್ಕೆ ಯತ್ನಿಸುತ್ತೇನೆ ಎಂದು ಶೋಭಾ ಹೇಳಿದರು. ಚಿಕ್ಕಮಗಳೂರಿನಲ್ಲಿ ಮಹಿಳಾ ಮತದಾರರ ಸಂಖ್ಯೆ ಹೆಚ್ಚಿರುವುದರಿಂದ ನನ್ನನ್ನು ಗೆಲ್ಲಿಸುತ್ತಾರೆಂದು ನಂಬಿದ್ದೇನೆ ಎಂದು ಶೋಭಾ ನುಡಿದರು. ಕಾಂಗ್ರೆಸ್ ನಾನು ಬೇರೆ ಕ್ಷೇತ್ರದಿಂದ ವಲಸೆ ಬಂದವರೆಂದು ಹೇಳುತ್ತಾರೆ. ಆದರೆ ಅದು ಸರಿಯಲ್ಲ. ನಾನು ಉಡುಪಿ ಜಿಲ್ಲೆಯಿಂದಲೇ ನನ್ನ ರಾಜಕೀಯ ಜೀವನ ಆರಂಭಿಸಿದೆ ಎಂದು ಹೇಳಿದರು.

