ಧರ್ಮಸ್ಥಳ: ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ ಭಾನುವಾರ ವಿಶ್ವಯೋಗ ದಿನಾಚರಣೆ ಅಂಗವಾಗಿ ಆಯೋಜಿಸಲಾದ ಯೋಗ ಪ್ರದರ್ಶನ ಕಾರ್ಯಕ್ರಮದಲ್ಲಿ ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಶುಭಾಶಂಸನೆ ಮಾಡಿ ಮಾತನಾಡಿದರು. ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಸಚಿವ ಕೆ. ಅಭಯಚಂದ್ರ ಜೈನ್, ಧಾನ ಪರಿಷತ್ ಉಪ ಸಭಾಪತಿ ಪುಟ್ಟಣ್ಣ, ರಾಜೀವ್ಗಾಂಧಿ ಆರೋಗ್ಯ ವಿ.ವಿ,ಯ ಕುಲಪತಿ ಡಾ. ಎಸ್. ಸಚ್ಚಿದಾನಂದ, ರಾಷ್ಟ್ರೀಯ ಸೇವಾ ಯೋಜನೆಯ ಮುಖ್ಯಸ್ಥ ಅರುಣ್ ಪುಜಾರ್, ಡಿ. ಹರ್ಷೇಂದ್ರ ಕುಮಾರ್, ಬ್ಲಾಸಂ ಫೆರ್ನಾಂಡಿಸ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮತ್ತು ಐ. ಶಶಿಕಾಂತ್ ಜೈನ್ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ
ನಿತ್ಯವೂ ನಿಯಮಿತವಾಗಿ ಯೋಗ ಮಾಡುವುದರಿಂದ ಆರೋಗ್ಯ ರಕ್ಷಣೆಯೊಂದಿಗೆ ನಮ್ಮ ಕಾರ್ಯದಕ್ಷತೆ ಹೆಚ್ಚಾಗುತ್ತದೆ. ಶಕ್ತಿಯ ವರ್ಧನೆಯೊಂದಿಗೆ ಆಯುಷ್ಯ ವೃದ್ಧಿಯಾಗುತ್ತದೆ ಎಂದು ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಹೇಳಿದರು.
ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ ಭಾನುವಾರ ವಿಶ್ವಯೋಗ ದಿನಾಚರಣೆ ಅಂಗವಾಗಿ ಆಯೋಜಿಸಲಾದ ಯೋಗ ಪ್ರದರ್ಶನ ಕಾರ್ಯಕ್ರಮದಲ್ಲಿ ಶುಭಾಶಂಸನೆ ಮಾಡಿ ಅವರು ಮಾತನಾಡಿದರು.
ಯೋಗಾಭ್ಯಾಸವು ತಾಯಿಯ ಗರ್ಭದಿಂದಲೇ ಗರ್ಭಾಸನದೊಂದಿಗೆ ಪ್ರಾರಂಭವಾಗುತ್ತದೆ ಎಂದು ಹೇಳಿದ ಅವರು ಯವಜನತೆ ಯೋಗದ ಸದುಪಯೋಗ ಪಡೆಯಬೇಕು ಎಂದು ಸಲಹೆ ನೀಡಿದರು.
ರಾಷ್ಟ್ರದ ಪ್ರಗತಿಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕರ್ತರ ಕೊಡುಗೆಯೂ ಅಮೂಲ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಸಚಿವ ಕೆ. ಅಭಯಚಂದ್ರ ಜೈನ್ ಮಾತನಾಡಿ ಮಾನ್ಯ ಮುಖ್ಯಮಂತ್ರಿಯವರೊಂದಿಗೆ ಸಮಾಲೋಚನೆ ನಡೆಸಿ ಶಿಕ್ಷಣ ಇಲಾಖೆ ಮತ್ತು ಕ್ರೀಡಾ ಇಲಾಖೆಯ ಜಂಟಿ ಸಹಯೋಗದೊಂದಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಯೋಗವನ್ನು ಶಾಲಾ ಪಠ್ಯದಲ್ಲಿ ಅಳವಡಿಸಲಾಗುವುದು ಎಂದು ಭರವಸೆ ನೀಡಿದರು.
ಕೆಲಸದ ಒತ್ತಡ ಹಾಗೂ ಆಧುನಿಕ ಆಹಾರ ಸೇವನಾ ಕ್ರಮದಿಂದ ಉಂಟಾಗುವ ಮಧುಮೇಹ, ರಕ್ತದೊತ್ತಡ ಮೊದಲಾದ ರೋಗಗಳ ಉಪಶಮನಕ್ಕೆ ಯೋಗವು ಸಂಜೀವಿನಿಯಾಗಿ ಅತ್ಯಂತ ಪರಿಣಾಮಕಾರಿಯಾಗಿದೆ ಎಂದರು.
ವಿಧಾನ ಪರಿಷತ್ ಉಪ ಸಭಾಪತಿ ಪುಟ್ಟಣ್ಣ, ರಾಜೀವ್ಗಾಂಧಿ ಆರೋಗ್ಯ ವಿ.ವಿ,ಯ ಕುಲಪತಿ ಡಾ. ಎಸ್. ಸಚ್ಚಿದಾನಂದ, ರಾಷ್ಟ್ರೀಯ ಸೇವಾ ಯೋಜನೆಯ ಮುಖ್ಯಸ್ಥ ಅರುಣ್ ಪುಜಾರ್ ಶುಭಾಶಂಸನೆ ಮಾಡಿದರು.
ಅಧ್ಯಕ್ಷತೆ ವಹಿಸಿದ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಮಾತನಾಡಿ ಯೋಗದ ಮಹತ್ವವನ್ನು ಇತರರಿಗೂ ತಿಳಿಸಿ ನಮ್ಮ ಸನಾತನ ಸಂಸ್ಕøತಿ ಮತ್ತು ಪರಂಪರೆಯ ಸೊಗಡನ್ನು ಉಳಿಸಬೇಕು ಎಂದು ಸಲಹೆ ನೀಡಿದರು.
ಬ್ಲಾಸಂ ಫೆರ್ನಾಂಡಿಸ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮತ್ತು ಶಾಂತಿವನ ಟ್ರಸ್ಟ್ನ ಯೋಗ ನಿರ್ದೇಶಕ ಐ. ಶಶಿಕಾಂತ್ ಜೈನ್ ಉಪಸ್ಥಿತರಿದ್ದರು.
ಉಜಿರೆಯ ಎಸ್.ಡಿ.ಎಮ್. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ ಶೆಟ್ಟಿ ಸ್ವಾಗತಿಸಿದರು. ಶಾಂತಿವನ ಟ್ರಸ್ಟ್ನ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಪಾಡಿತ್ತಾಯ ಧನ್ಯವಾದವಿತ್ತರು.
400 ಮಂದಿ ವಿದ್ಯಾರ್ಥಿಗಳು ಯೋಗ ಪ್ರದರ್ಶನ ನೀಡಿದರು.
ಉಜಿರೆಯಲ್ಲಿ ಎನ್.ಸಿ.ಸಿ. ಕೆಡೆಟ್ಗಳಿಂದ ಯೋಗ ಪ್ರದರ್ಶನ : ಉಜಿರೆಯಲ್ಲಿ ಎಸ್.ಡಿ.ಎಮ್. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಬೆಳ್ತಂಗಡಿ ತಾಲ್ಲೂಕಿನ ವಿವಿಧ ಶಾಲಾ-ಕಾಲೇಜುಗಳ 800 ಎನ್.ಸಿ.ಸಿ. ಕೆಡೆಟ್ಗಳು ಯೋಗ ಪ್ರದರ್ಶನ ನೀಡಿದರು.
ಎಸ್.ಡಿ.ಎಮ್. ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಯಶೋವರ್ಮ ಶುಭ ಹಾರೈಸಿದರು.






