ಬಂಟ್ವಾಳ:ಗ್ರಾಮೀಣ ಯುವ ಜನತೆಗೆ ಉದ್ಯೋಗ ಒದಗಿಸುವುದು ಸರಕಾರದ ಜವಾಬ್ದಾರಿಯಾಗಿದ್ದು, ಇಂತಹ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಪ್ರತೀ ವರ್ಷ ನಡೆಸುವುದು ಅಗತ್ಯ ಎಂದು ಕೇಂದ್ರ ಮಾಜಿ ಸಚಿವ ಆಸ್ಕರ್ ಫೆರ್ನಾಂಡಿಸ್ ಹೇಳಿದರು.
ತಾಲ್ಲೂಕಿನ ಬೆಂಜನಪದವು ಕೆನರಾ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಶುಕ್ರವಾರ ಸಮಾರೋಪಗೊಂಡ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮಕ್ಕೆ ಭೇಟಿ ನೀಡಿದ ಬಳಿಕ ಆವರು ಮಾತನಾಡಿದರು.

ದೇಶದಲ್ಲಿ ನಿರುದ್ಯೋಗ ಸಮಸ್ಯೆ ತೀರಾ ಕಾಡುತ್ತಿದ್ದು, ಇದನ್ನು ನಿವಾರಿಸುವ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನಿಸಿದಾಗ ಮಾತ್ರ ಯುವ ಶಕ್ತಿಯ ಸದ್ಬಳಕೆಯಾಗಿ ದೇಶದ ಪ್ರಗತಿ ಸಾಧ್ಯವಾಗುತ್ತದೆ ಎಂದು ಅವು ಹೇಳಿದರು.
ಉದ್ಯೋಗ ಮೇಳ ಮಾದರಿಯಲ್ಲಿ ಶಿಕ್ಷಣ ಮೇಳ ಆಯೋಜಿಸಿದಾಗ ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿರುವ ಗ್ರಾಮೀಣ ಪ್ರದೇಶಗಳ ಯುವ ಜನತೆಗೆ ಅನುಕೂಲವಾಗುತ್ತದೆ. ಇಲ್ಲಿನ ಉದ್ಯೋಗ ಮೇಳ ರಾಜ್ಯಕ್ಕೆ ಮಾದರಿಯಾಗಲಿದೆ ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಮಮತಾ ಡಿ.ಎಸ್. ಗಟ್ಟಿ, ಎಂ.ಎಸ್.ಮಹಮ್ಮದ್, ಬುಡಾ ಅಧ್ಯಕ್ಷ ಪಿಯೂಸ್ ಎಲ್. ರೋಡ್ರಿಗಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಮಾಯಿಲಪ್ಪ ಸಾಲ್ಯಾನ್, ಅಬ್ಬಾಸ್ ಅಲಿ ಬೋಳಂತೂರು, ಭೂ ಅಭಿವೃಧ್ಧಿ ಬ್ಯಾಂಕ್ ಅಧ್ಯಕ್ಷ ಸುದರ್ಶನ್ ಜೈನ್, ಪ್ರಮುಖರಾದ ಬಿ. ಪದ್ಮಶೇಖರ್ ಜೈನ್, ಬಿ.ಎಚ್. ಖಾದರ್, ಸಂಪತ್ ಕುಮಾರ್ ಶೆಟ್ಟಿ, ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಮತ್ತಿತರು ಉಪಸ್ಥಿತರಿದ್ದರು.
–
