ಕಲ್ಲಡ್ಕ:ತಾಲ್ಲೂಕಿನ ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿ ಬಳಿ ರೂ 1ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಶ್ರೀರಾಮ ಮಂದಿರವನ್ನು ಇದೇ 21ರಂದು ಬೆಳಿಗ್ಗೆ ಚಿತ್ರದುರ್ಗ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಲೋಕಾರ್ಪಣೆಗೊಳ್ಳಲಿರುವ ಹಿನ್ನೆಲೆಯಲ್ಲಿ ಕಲ್ಲಡ್ಕ ಪೇಟೆಯುದ್ದಕ್ಕೂ ಕೇಸರಿಮಯಗೊಂಡಿದೆ.

ಇದೇ 21ರಿಂದ 23ರತನಕ ನಡೆಯುವ ಭಜನೆ, ಧಾರ್ಮಿಕ, ಸಾಂಸ್ಕೃತಿಕ ಮತ್ತಿತರ ಕಾರ್ಯಕ್ರಮಗಳಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಮತ್ತಿತರ ಗಣ್ಯರು ಆಗಮಿಸುವರು. ಪ್ರತಿದಿನ ಸಹಸ್ರಾರು ಮಂದಿ ಭಕ್ತರಿಗೆ ಸಾರ್ವಜನಿಕ ಅನ್ನಸಂತರ್ಪಣೆ ಆಯೋಜಿಸಲಾಗಿದೆ. ಇದಕ್ಕಾಗಿ ಇದೇ 19ರಂದು ಸಂಜೆ 4ಗಂಟೆಗೆ ಮೆಲ್ಕಾರ್ ಜಂಕ್ಷನ್ ಬಳಿ ತಾಲ್ಲೂಕಿನ ವಿವಿಧೆಡೆಯಿಂದ ಆಗಮಿಸುವ ಆಕರ್ಷಕ ಹೊರೆಕಾಣಿಕೆ ಮೆರವಣಿಗೆಯು ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಮೂಲಕ ಕಲ್ಲಡ್ಕ ಮಂದಿರಕ್ಕೆ ತಲುಪಲಿದೆ ಎಂದು ಸಮಿತಿ ಗೌರವಾಧ್ಯಕ್ಷ ಡಾ.ಕೆ.ಪ್ರಭಾಕರ ಭಟ್ ತಿಳಿಸಿದ್ದಾರೆ.
