ಬಂಟ್ವಾಳ:ಸಜಿಪಮೂಡ ಗ್ರಾಮದ ಸರ್ವೆ ನಂ.185ರ 1ಬಿ, 2ಬಿ, 1ಬಿ2, 1ಬಿ3 ಜಮೀನಿನ ಸರ್ಕಾರಿ ರಸ್ತೆಯನ್ನು ಸ್ಥಳೀಯ ಇಬ್ಬರು ಅತಿಕ್ರಮಿಸಿಕೊಂಡಿರುವುದನ್ನು ತಹಶೀಲ್ದಾರ್ ಪುರಂದರ ಹೆಗ್ಡೆ ನೇತೃತ್ವದ ಕಂದಾಯ ಇಲಾಖಾ ಅಧಿಕಾರಿಗಳು ಮಂಗಳವಾರ ಸಂಜೆ ಜೆಸಿಬಿ ಮೂಲಕ ತೆರವುಗೊಳಿಸಿದ ಘಟನೆ ನಡೆದಿದೆ.
ಇಲ್ಲಿನ ನಿವಾಸಿಗಳಾದ ಯೋಗೀಶ ನಾಯಕ್ ಮತ್ತು ಶಾಂತಾರಾಮ ಶೆಣೈ ಎಂಬವರು ರಸ್ತೆಗೆ ತಡೆಯೊಡ್ಡಿದ್ದಾರೆ ಎಂದು ಆರೋಪಿಸಿ ಸ್ಥಳೀಯ ನಿವಾಸಿ ಮೋನಪ್ಪ ಮೂಲ್ಯ ಎಂಬವರು ಮಂಗಳೂರು ಸಹಾಯಕ ಆಯುಕ್ತರಿಗೆ ದೂರು ಸಲ್ಲಿಸಿದ್ದರು. ಇದರಿಂದಾಗಿ ಸಹಾಯಕ ಆಯುಕ್ತರ ನ್ಯಾಯಾಲಯ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಮೇಲ್ಮನವಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಆದೇಶದ ಹಿನ್ನೆಲೆಯಲ್ಲಿ ಸಾರ್ವಜನಿಕ ರಸ್ತೆಗೆ ತಡೆಯೊಡ್ಡಿ ಅಳವಡಿಸಲಾಗಿದ್ದ ಕಬ್ಬಿಣದ ಗೇಟು ಸಹಿತ ಜೆಸಿಬಿ ಮೂಲಕ ತೆರವುಗೊಳಿಸಲಾಗಿದೆ. ಕಂದಾಯ ನಿರೀಕ್ಷಕ ಆಸಿಫ್ ಇಕ್ಬಾಲ್, ನಗರ ಠಾಣಾಧಿಕಾರಿ ನಂದಕುಮಾರ್ ಮತ್ತಿತರರು ಇದ್ದರು ಎಂದು ತಹಶೀಲ್ದಾರ್ ತಿಳಿಸಿದ್ದಾರೆ.
—
