ಬಂಟ್ವಾಳ: ಸರ್ಕಾರಿ ಮತ್ತು ಅನುದಾನಿತ ಕಿರಿಯ, ಮಾಧ್ಯಮಿಕ, ಪ್ರೌಢಶಾಲೆ ವಿಭಾಗದ ವಿದ್ಯಾರ್ಥಿಗಳಲ್ಲಿ ಹುದುಗಿರುವ ಪ್ರತಿಭೆಗಳನ್ನು ಅನಾವರಣಗೊಳಿಸುವ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಇಲ್ಲಿನ ವಗ್ಗ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಇದೇ 29ರಿಂದ 30ರತನಕ ‘ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಲೋಕೇಶ್ ಹೇಳಿದ್ದಾರೆ.ಬಿ.ಸಿ.ರೋಡಿನಲ್ಲಿ ಗುಉವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಚಿವ ಯು.ಟಿ.ಖಾದರ್, ಸಂಸದ ನಳೀನ್ ಕುಮಾರ್ ಕಟೀಲ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಮತ್ತಿತರ ಜನಪ್ರತಿನಿಧಿಗಳು ಸಹಿತ ಜಿಲ್ಲಾಧಿಕಾರಿ ಕೆ.ಜಿ.ಜಗದೀಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ
ಶ್ರೀವಿದ್ಯಾ ಮತ್ತಿತರ ಗಣ್ಯರು ಭಾಗವಹಿಸುವರು.

ಜಿಲ್ಲೆಯಲ್ಲಿ ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ (1ರಿಂದ 4ನೆ ತರಗತಿ) ಒಟ್ಟು 350 ವಿದ್ಯಾರ್ಥಿಗಳು, ಹಿರಿಯ ಪ್ರಾಥಮಿಕ ವಿಭಾಗದಲ್ಲಿ (5ರಿಂದ 7ನೆ ತರಗತಿ) ಒಟ್ಟು 350 ವಿದ್ಯಾರ್ಥಿಗಳು, ಪ್ರೌಢ ಶಾಲಾ ವಿಭಾಗದಲ್ಲಿ (8ರಿಂದ 10ನೇ ತರಗತಿ) ಒಟ್ಟು 147 ವಿದ್ಯಾರ್ಥಿಗಳು, 9ರಿಂದ 12ನೇ ತರಗತಿ ಒಟ್ಟು 224 ಮಂದಿ ವಿದ್ಯಾರ್ಥಿಗಳು ಕಲೋತ್ಸವ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವರು. ಒಟ್ಟು 1,071 ಮಂದಿ ವಿದ್ಯಾರ್ಥಿಗಳಿಗೆ ಮೂರು ಪ್ರತ್ಯೇಕ ವಿಭಾಗದಲ್ಲಿ ಒಟ್ಟು 26 ಸ್ಪರ್ಧೆ ನಡೆಯಲಿದೆ ಎಂದು ಅವರು ತಿಳಿಸಿದರು. ಈ ಹಿಂದೆ ರಾಷ್ಟ್ರೀಯ ಮಟ್ಟದಲ್ಲಿ ಎರಡು ಬಾರಿ ಜಿಲ್ಲೆಯ ವಿದ್ಯಾರ್ಥಿಗಳು ಪ್ರತಿನಿಧಿಸಿದ್ದು, ವಿಜೇತರಿಗೆ ಜ್ಞಾನ ಪೀಠ ಪ್ರಶಸ್ತಿ ಪುರಸ್ಕøತರ ಕೃತಿಗಳನ್ನು ಬಹುಮಾನ ನೀಡಲಾಗುವುದು. ಏಕ ಕಾಲದಲ್ಲಿ ಮೂರು ವೇದಿಕೆ ಮತ್ತು 9 ಪ್ರತ್ಯೇಕ ಕೊಠಡಿಯಲ್ಲಿ ಸಾಮೂಹಿಕ ಮತ್ತು ವೈಯಕ್ತಿಕ ಸ್ಪರ್ಧೆ ನಡೆಯಲಿದೆ ಎಂದು ಅವರು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ನೋಡೆಲ್ ಅಧಿಕಾರಿ ರಾಧಾಕೃಷ್ಣ ಭಟ್, ಶಿಕ್ಷಣ ಸಂಯೋಜಕಿ ಸುಜಾತ ಆರ್. ಶೆಟ್ಟಿ. ಮತ್ತಿತರರು ಇದ್ದರು.
