ಮೂಡುಬಿದಿರೆ: ಕರ್ನಾಟಕ ಸರಕಾರವು ಅನೇಕ ಜನಪರ ಯೋಜನೆಗಳನ್ನು ಹಮ್ಮಿಕೊಂಡಿದೆ. ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ವಿದ್ಯಾರ್ಥಿಗಳಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಅದರಲ್ಲಿ ವಾರದಲ್ಲಿ 3 ದಿನ ವಿದ್ಯಾರ್ಥಿಗಳಿಗೆ `ಕ್ಷೀರಭಾಗ್ಯ’ ಯೋಜನೆಯೂ ಒಂದು. ವಿದ್ಯಾರ್ಥಿಗಳ ಉನ್ನತ ವಿದ್ಯಾಭ್ಯಾಸಕ್ಕಾಗಿ ಎಸ್.ಎಸ್.ಎಲ್.ಸಿ. ಸಾಧಕರಿಗೆ ಉಚಿತ ಲ್ಯಾಪ್ಟಾಪ್ ವಿತರಿಸಲಾಗುತ್ತಿದೆ. ವಿದ್ಯಾರ್ಥಿಗಳು ಇದರ ಸದ್ವಿನಿಯೋಗ ಮಾಡಬೇಕು ಎಂದು ಮಾಜಿ ಸಚಿವ, ಶಾಸಕ ಕೆ.ಅಭಯಚಂದ್ರ ಜೈನ್ ಹೇಳಿದರು.
ಪ್ರಾಂತ್ಯದಲ್ಲಿರುವ ಸರ್ಕಾರಿ ಸಂಯುಕ್ತ ಪ್ರೌಢಶಾಲೆ ಮಂಗಳವಾರ ನಡೆದ ಕನ್ನಡ ರಾಜ್ಯೋತ್ಸವ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 2015 ಎಪ್ರಿಲ್ನಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಮೂಡುಬಿದಿರೆ ವಲಯ ಮಟ್ಟದ ಸರ್ಕಾರಿ ಪ್ರೌಢಶಾಲೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ನೆಲ್ಲಿಕಾರು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಶ್ರೀಕಲಾ, ಮಲ್ಲಿಕಾ ಹಾಗೂ ಪ್ರಾಂತ್ಯ ಸರ್ಕಾರಿ ಸಂಯುಕ್ತ ಪ್ರೌಢಶಾಲೆಯ ವಿದ್ಯಾರ್ಥಿ ವರುಣ್ ಯಂ. ಅವರಿಗೆ ಇಲಾಖೆಯಿಂದ ಕೊಡಮಾಡಿದ ಲ್ಯಾಪ್ಟಾಪ್ಗಳನ್ನು ಶಾಸಕರು ವಿತರಿಸಿದರು.
ವಿಕಲಚೇತನ ವಿದ್ಯಾರ್ಥಿನಿಯರಾದ ಶ್ರುತಿ (8ನೇ ತರಗತಿ), ಶ್ರಾವ್ಯ (9ನೇ ತರಗತಿ) ಅವರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಕೊಡಮಾಡಿದ ತಲಾ 2000 ರೂ. ಚೆಕ್ ವಿತರಿಸಲಾಯಿತು. ಪ್ರೌಢಶಾಲೆಯ ಎಸ್.ಡಿ.ಎಂ.ಸಿ. ಕಾರ್ಯಾಧ್ಯಕ್ಷ ಹೆಚ್.ಸುರೇಶ್ ಪ್ರಭು, ಪುರಸಭಾ ಸದಸ್ಯೆ ವನಿತಾ, ಪ್ರಾಥಮಿಕ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಸುಂದರ ಆಚಾರ್, ಉದ್ಯಮಿ ಅಸ್ಮಲ್, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ದೈ.ಶಿ.ಪರಿವೀಕ್ಷಣಾಧಿಕಾರಿ ಶಿವಾನಂದ ಕಾಯ್ಕಿಣಿ ಉಪಸ್ಥಿತರಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಮುಖ್ಯ ಶಿಕ್ಷಕಿ ಬಿ.ರಾಜಶ್ರೀ ಸ್ವಾಗತಿಸಿದರು. ಕನ್ನಡ ಭಾಷಾ ಶಿಕ್ಷಕ ಗಣೇಶ್ ಕಾರ್ಯಕ್ರಮ ನಿರೂಪಿಸಿದರು. ದೈ.ಶಿ.ಶಿ. ವಿನಯಕುಮಾರ್ ವಂದಿಸಿದರು.

