ಮೂಡುಬಿದಿರೆ: ಕಲುಷಿತ ಮನೋಭಾವನೆಯನ್ನು ಶುದ್ಧೀಕರಿಸುವ ಭಗವದ್ಗೀತೆ ನಮ್ಮ ದಿನಚರಿಯಾಗಬೇಕು. ಭಗವದೀತಾ ಜಯಂತಿ ಪ್ರತಿ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕವಾಗಿ ಆಚರಣೆಯಾಗಬೇಕು. ಇಡೀ ಸಮಾಜವನ್ನು ಸನ್ಮಾರ್ಗದಲ್ಲಿ ಕೊಂಡೊಯ್ಯುವ ಭಗವದ್ಗೀತಾ ಜಯಂತಿಯನ್ನು ಸಾರ್ವಜನಿಕ ಹಬ್ಬವಾಗಿ ಆಚರಿಸುವಂತಾಗಬೇಕು. ಈ ಮೂಲಕ ದೇಶವು ಉನ್ನತಿಯತ್ತ ಸಾಗಬೇಕು ಎಂದು ಶ್ರೀಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀ ಮಜ್ಜಗದ್ಗುರು ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀ ಆಶಯ ವ್ಯಕ್ತಪಡಿಸಿದರು.
ಆಳ್ವಾಸ್ ಕಾಲೇಜಿನ ಸಂಸ್ಕೃತ ವಿಭಾಗ ಮತ್ತು ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಗಳ ಸಹಯೋಗದಲ್ಲಿ ಬುಧವಾರ ಸಂಜೆ ಪುತ್ತಿಗೆ ವಿವೇಕಾನಂದ ನಗರದಲ್ಲಿ ನಡೆದ ಭಗವದ್ಗೀತಾ ಅಭಿಯಾನ-ಸಮರ್ಪಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದರು. ಈ ವರ್ಷ ಏಳುವರೆ ಸಾವಿರ ವಿದ್ಯಾರ್ಥಿಗಳಿಗೆ ಹಾಗೂ ಹತ್ತು ಸಾವಿರ ಜನರನ್ನು ಭಗವದ್ಗೀತಾ ಅಭಿಯಾನ ತಲುಪಿದೆ. ಆಳ್ವಾಸ್ನಂತಹ ವಿದ್ಯಾಸಂಸ್ಥೆಗಳ ಸಹಕಾರದಿಂದ ಅಭಿಯಾನವನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು ಸಾಧ್ಯ ಎಂದರು.
ಮೂಡುಬಿದಿರೆ ಶ್ರೀ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಪಂಡಿತಾಚರ್ಯವರ್ಯ ಸ್ವಾಮೀಜಿ ಆಶೀರ್ವಚನ ನೀಡಿ, ಭಾವನೆ, ಗುಣಗಳನ್ನು ತಿದ್ದಿ ತೀಡುವ ಕೆಲಸ ಭಗವದ್ಗೀತೆ ಆಗುತ್ತದೆ ಎಂದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ, ಭಗವದ್ಗೀತಾ ಅಭಿಯಾನ ಸಮಿತಿ ದ.ಕ ಜಿಲ್ಲಾ ಅಧ್ಯಕ್ಷ ಪ್ರೊ.ಎಂ.ಬಿ ಪುರಾಣಿಕ್, ಸಮಿತಿಯ ಮಹಿಳಾ ವಿಭಾಗದ ಅಧ್ಯಕ್ಷೆ ಕಾತ್ಯಾಯಿನಿ ಸೀತಾರಾಮ, ಅಲಂಗಾರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ವೇ.ಮೂ ಈಶ್ವರ ಭಟ್, ಧನಲಕ್ಷ್ಮೀ ಸಮೂಹ ಸಂಸ್ಥೆಗಳ ಕೆ.ಶ್ರೀಪತಿ ಭಟ್ ವೇದಿಕೆಯಲ್ಲಿದ್ದರು.
ಆಳ್ವಾಸ್ ಕಬ್ಬಡ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಪ್ರಶಾಂತ್ ಬಿ. ಸ್ವಾಗತಿಸಿದರು. ಸೋಂದಾ ಭಾಸ್ಕರ ಭಟ್ ಪ್ರಾಸ್ತಾವವಿಕವಾಗಿ ಮಾತನಾಡಿದರು. ವಿನಾಯಕ ಭಟ್ ಗಾಳಿಮನೆ ಕಾರ್ಯಕ್ರಮ ನಿರೂಪಿಸಿದರು. ಆಳ್ವಾಸ್ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಶ್ರೀನಿಧಿ ಯಳಚಿತ್ತಾಯ ವಂದಿಸಿದರು.

