ಮೂಡುಬಿದಿರೆ: ಕಲ್ಲಬೆಟ್ಟು ಸರ್ಕಾರಿ ಉನ್ನತೀಕರಿಸಿದ ಮಾದರಿ ಹಿ.ಪ್ರಾ.ಶಾಲೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 126ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಿತು.
ಪ್ರಾರಂಭದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಹೂವನ್ನು ಅರ್ಪಿಸುವುದರ ಮೂಲಕ ಗೌರವ ಸಲ್ಲಿಸಿದರು. ವಿದ್ಯಾರ್ಥಿ ನಾಯಕಿ ನಿತ್ಯಾಕೃಷ್ಣ ಅಂಬೇಡ್ಕರ್ ಅವರ ಬಾಲ್ಯ ಹಾಗೂ ವಿದ್ಯಾಭ್ಯಾಸದ ಬಗ್ಗೆ ಮಾತನಾಡಿದರು.
ಮುಖ್ಯ ಶಿಕ್ಷಕ ವಿನಯಕುಮಾರ್ ಎಂ. ಮಾತನಾಡಿ, ಭಾರತದ ಸಂವಿಧಾನ ರಚನೆಯಲ್ಲಿ ಅಂಬೇಡ್ಕರ್ ಅವರ ದೂರದೃಷ್ಟಿತ್ವ ಪ್ರಮುಖ ಪಾತ್ರ ವಹಿಸಿದೆ. ಮಹಿಳೆಯರ ಮತ್ತು ದೀನದಲಿತರ ಏಳಿಗೆಗಾಗಿ ಅವರು ಪಟ್ಟಿರುವ ಪರಿಶ್ರಮ ಹಾಗೂ ಅವರ ಜೀವನ ಭಾರತೀಯರಾದ ನಮಗೆಲ್ಲರಿಗೂ ಅನುಕರಣೀಯವಾಗಿದೆ ಎಂದರು.

