ಮೂಡುಬಿದರೆ: ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯವನ್ನು ಖಂಡಿಸಿ ಮೂಡುಬಿದರೆ ಧವಲಾ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿನಿಂದ ತಹಸೀಲ್ದಾರ್ ಕಚೇರಿಯವರೆಗೆ ಮಂಗಳವಾರ ಕಾಲ್ನಡಿಗೆಯಲ್ಲಿ ಸಾಗಿ ಮೌನ ಪ್ರತಿಭಟನೆ ಮಾಡಿದರು.
ಕಾಲೇಜಿನ ವಿದ್ಯಾರ್ಥಿನಿ ಸಂಧ್ಯಾ ಕುಮಾರಿ ಮಾತನಾಡಿ, ರಾಜ್ಯದ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಸರ್ಕಾರ ಯಾವುದೇ ಕಠಿಣ ಕ್ರಮ ಕೈಗೊಳ್ಳದೇ ಇರುವುದರಿಂದ ಪ್ರಕರಣಗಳು ಹೆಚ್ಚಾಗತ್ತಿದೆ. ಸಿ.ಎಂ ಮನೆಯ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯವಾದರೆ ಸುಮ್ಮನಿರುತ್ತಾರೆಯೇ? ಎಂದು ಪ್ರಶ್ನಿಸಿದರು.

ವಿದ್ಯಾರ್ಥಿನಿ ವಿಶ್ರುತ ಮಾತನಾಡಿ ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ, ದೌರ್ಜನ್ಯ ಪ್ರಕರಣಗಳನ್ನು ಮಹಿಳೆಯರು ಮಾತ್ರವಲ್ಲ ಸಮಾಜದ ಎಲ್ಲರೂ ಖಂಡಿಸಬೇಕು. ಹೆಣ್ಣು ಮಕ್ಕಳು ತಮ್ಮ ಮೇಲೆ ನಡೆಯುವ ದೌರ್ಜನ್ಯವನ್ನು ಮೌನವಾಗಿ ಸಹಿಸದೆ ಪ್ರತಿಭಟಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದರು.
ವಿದ್ಯಾರ್ಥಿ ಸಂಘದ ಅಧ್ಯಕ್ಷ ಆಲ್ವಿನ್ ಜಾನ್ಸನ್ ಡಿಸೋಜಾ, ಉಪಾಧ್ಯಕ್ಷ ಕ್ಲೇವಿನ್ ಪಿಂಟೋ, ಕಾರ್ಯದರ್ಶಿ ಸುಜಿತ್, ಜೊತೆ ಕಾರ್ಯದರ್ಶಿ ವಿಶ್ರುತ್ ಉಪಸ್ಥಿತರಿದ್ದರು. ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು
