ಮಂಗಳೂರು : ಅಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ಸಂಬಂಧ ತನಿಖೆ ನಡೆಸಲು ನಗರಪೊಲೀಸ್ ಆಯುಕ್ತ ಟಿ.ಆರ್ ಸುರೇಶ್ ಆದೇಶ ಮಾಡಿದ್ದಾರೆ. ಮಂಗಳೂರು ಉತ್ತರ ವಿಭಾಗದ ಎಸಿಪಿಯಿಂದ ಈ ಪ್ರಕರಣದ ತನಿಖೆ ಮಾಡಲಿದ್ದಾರೆ. ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ 10ನೇತರಗತಿ ವ್ಯಾಸಂಗ ಮಾಡುತ್ತಿದ್ದ ಕಾವ್ಯಶ್ರೀ ಅವರ ಸಾವಿನ ಬಗ್ಗೆ ಅವರ ಪೋಷಕರು ಸಾಕಷ್ಟು ಅನುಮಾನಗಳನ್ನು ವ್ಯಕ್ತಪಡಿಸಿದಲ್ಲದೆ ತನಿಖೆ ನಡೆಸುವಂತೆ ದೂರು ನೀಡಿದ್ದರು. ಈ ಸಾವಿನ ಪ್ರಕರಣ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ತನಿಖೆ ನಡೆಸುವಂತೆ ಒತ್ತಾಯಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತರು ತನಿಖೆ ನಡೆಸಲು ಆದೇಶ ನೀಡಿದ್ದಾರೆ.
ಏನಿದು ಪ್ರಕರಣ:ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಕಟೀಲ್ ನಿವಾಸಿ ಕಾವ್ಯಶ್ರೀ ಅವರು ಸ್ಪೋಟ್ರ್ಸ್ ಕೋಟದಡಿ ಒಂದು ತಿಂಗಳ ಹಿಂದೆ ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರವೇಶ ಪಡೆದಿದ್ದರು. 10ನೇ ತರಗತಿ ಓದುತ್ತಿದ್ದ ಕಾವ್ಯಶ್ರೀ ರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿಯಾಗಿದ್ದರು. ಜು.20ರಂದು ತಮ್ಮ ಹಾಸ್ಟೆಲ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
