ಬಂಟ್ವಾಳ:ತಾಲ್ಲೂಕಿನ ಕುಕ್ಕಿಪಾಡಿ ಗ್ರಾಮದ ಎಲ್ಪೇಲು ಎಂಬಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ನ್ನು ಮರಳು ಸಹಿತ ಪೊಲೀಸರು ವಶಪಡಿಸಿಕೊಂಡ ಘಟನೆ ಮಂಗಳವಾರ ನಡೆದಿದೆ. ಎಎಸ್ಪಿ ಡಾ.ಅರುಣ್ ನೇತೃತ್ವದಲ್ಲಿ ಪುಂಜಾಲಕಟ್ಟೆ ಠಾಣಾಧಿಕಾರಿ ರಾಮ ನಾಯ್ಕ್ ಅವರು ಮಂಗಳವಾರ ಮಧ್ಯಾಹ್ನ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಈ ಅಕ್ರಮ ಬೆಳಕಿಗೆ ಬಂದಿದೆ. ಸಂಗಬೆಟ್ಟು ಸಮೀಪದ ಪುಚ್ಚಮೊಗಲು ಫಲ್ಗುಣಿ ಹೊಳೆಯಿಂದ ಮರಳು ಮೇಲೆತ್ತಿ ಬೆಳ್ತಂಗಡಿ ಕಡೆಗೆ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ. ಟಿಪ್ಪರ್ ಚಾಲಕ ಬದ್ರುದ್ದೀನ್ ಎಂಬಾತನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
