ಹಾವೇರಿ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಮಹಿಳೆ, ಮಕ್ಕಳ ಮೇಲೆ ಹಲ್ಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿದೆ ಎಂದು ಮಧ್ಯ ಪ್ರದೇಶದ ಮುಖ್ಯಮಂತ್ರಿ ಶಿವರಾಜ ಸಿಂಗ್ ಚೌಹಾಣ ಆರೋಪಿಸಿದ್ದಾರೆ.
ನಗರದ ಹುಕ್ಕೇರಿಮಠದ ಆವರಣದಲ್ಲಿ ಆಯೋಜಿಸಿದ್ದ ಬಿಜೆಪಿ ಪರಿವರ್ತನೆ ಯಾತ್ರೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಿಂದ ಕೂಡಿದ್ದು, ತನ್ನವರು ಭ್ರಷ್ಟಾಚರದಲ್ಲಿ ತೊಡಗಿದ್ದರು ಕ್ರಮಕೈಗೊಳ್ಳದೆ ಸರ್ಕಾರ ದುರಾಡಳಿತ ನಡೆಸುತ್ತದೆ ಎಂದು ದೂರಿದರು.
ಕೇಂದ್ರ ಸರಕಾರದ ಯೋಜನೆಗಳು ತಮ್ಮ ಸಾಧನೆ ಎಂದು ಬಡಾಯಿ ಕೊಚ್ಚುಕೊಳ್ಳುವ ಸಿದ್ದರಾಮಯ್ಯ ಅವರಿಗೆ ನಾಚಿಕೆಯಾಗಬೇಕು. ರಾಜ್ಯ ಸರಕಾರ ಮರಳು ಹಾಗೂ ಗ್ರ್ಯಾನೆಟ್ ದಂಧೆಯಲ್ಲಿ ನಿರತವಾಗಿದ್ದು, ಇಂತಹ ಸರ್ಕಾರವನ್ನು ತೊಲಗಿಸಲು ಜನತೆ ಮುಂದಾಗಬೇಕು ಎಂದು ಸಲಹೆ ನೀಡಿದರು.
ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅವರು ಆಯ್ಕೆಯಾಗುವುದು ಶತ ಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದರು.

