ಬೆಂಗಳೂರು: ಸಮಾಜ ವಿರೋಧಿ ಚುವಟಿಕೆಗಳಲ್ಲಿ ತೊಡಗುವ ಅಥವಾ ಪ್ರೋತ್ಸಾಹಿಸುವವರ ಮೇಲೆ ಯಾವುದೇ ಮುಲಾಜಿಲ್ಲದೇ ಕ್ರಿಮಿನಲ್ ಕೇಸ್ ದಾಖಲಿಸಿ ಕ್ರಮಕೈಗೊಳ್ಳಬೇಕು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಶನಿವಾರ ವಿಕಾಸ ಸೌಧದಲ್ಲಿ ನಗರ ಪೊಲೀಸ್ ಆಯುಕ್ತರು, ಹೆಚ್ಚುವರಿ ಆಯುಕ್ತರು, ಎಂಟು ವಿಭಾಗಗಳ ಡಿಸಿಪಿಗಳು, ಎಸಿಪಿಗಳು, ಇನ್ಸ್ ಪೆಕ್ಟರ್ಗಳು ಹಾಗೂ ಸಂಚಾರಿ ವಿಭಾಗದ ಹೆಚ್ಚುವರಿ ಆಯುಕ್ತರು ಮತ್ತು ಸೈಬರ್ ಕ್ರೈಮ್ ವಿಭಾಗದ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮಾತನಾಡಿದರು.
ರಾಜ್ಯಾದ್ಯಂತ ಶಾಂತಿ-ಸುವ್ಯವಸ್ಥೆ ಕಾಪಾಡಬೇಕಾದ ಹೊಣೆಗಾರಿಕೆ ನಿಮ್ಮ ಮೇಲಿದ್ದು, ಪೊಲೀಸರು ಜನಸ್ನೇಹಿಯಾಗಿರಬೇಕು. ಅಪರಾಧ ಚಟುವಟಿಕೆಗಳನ್ನು ನಡೆಸುವವರ ಮೇಲೆ ನಿಗಾ ಇಟ್ಟು ಕೂಡಲೇ ಅವುಗಳನ್ನು ನಿಯಂತ್ರಿಸುವಂತೆ ತಿಳಿಸಿದ್ದಾರೆ.
ಕ್ರಿಮಿನಲ್ಗಳ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದೂ ಸೇರಿದಂತೆ 30 ಅಂಶಗಳ ಕಾರ್ಯಸೂಚಿಯನ್ನು ಪೊಲೀಸರಿಗೆ ನೀಡಿರುವ ಸಚಿವರು, ಇಲಾಖೆಗೆ, ರಾಜ್ಯಕ್ಕೆ, ಸರ್ಕಾರಕ್ಕೆ ಹೆಸರು ತರಬೇಕೆಂದು ಸಲಹೆ ನೀಡಿದ್ದಾರೆ.

