ಬಂಟ್ವಾಳ: ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ವೃಕ್ಷ ಮಾತೆ ಡಾ. ಸಾಲುಮರ ತಿಮ್ಮಕ್ಕ ರವರ ಹೆಸರಿನಲ್ಲಿ ವೃಕ್ಷ ಉದ್ಯಾನವನ ನಿರ್ಮಿಸಲಾಗುವುದು ಎಂದು ರಾಜ್ಯ ಅರಣ್ಯ ಸಚಿವ ಬಿ.ರಮಾನಾಥ ರೈ ಭರವಸೆ ನೀಡಿದ್ದಾರೆ.
ಸೋಮವಾರ ತಾಲೂಕಿನ ಕಾವಳಪಡೂರು ಗ್ರಾಮದ ಆಲಂಪುರಿಯಲ್ಲಿ ಅರಣ್ಯ ಇಲಾಖೆ ವತಿಯಿಂದ ನಿರ್ಮಾಣಗೊಳ್ಳಲಿರುವ ಡಾ.ಸಾಲುಮರ ತಿಮ್ಮಕ್ಕನ ಹೆಸರಿನ ವೃಕ್ಷ ಉದ್ಯಾನವನಕ್ಕೆ ಶಿಲಾನ್ಯಾಸ ನೆರವೇರಿಸಿ ಬಳಿಕ ಅವರು ಮಾತನಾಡಿದರು.
ಅರಣ್ಯ ಇಲಾಖೆಯ ವತಿಯಿಂದ ನಿರ್ಮಾಣಗೊಳ್ಳುವ ಆಲಂಪುರಿ ವೃಕ್ಷ ಉದ್ಯಾನವನವನ್ನು ಜಿಲ್ಲೆಯಲ್ಲಿಯೇ ಅತ್ಯಂತ ವಿಶಿಷ್ಟ ಉದ್ಯಾನವನವಾಗಿ ನಿರ್ಮಿಸಲಾಗುವುದು. ಸಿಎಸ್ಆರ್ ಅನುದಾನವನ್ನು ಬಳಸಿಕೊಂಡು ಹಂತ ಹಂತವಾಗಿ ಅಭಿವೃದ್ಧಿ ಪಡಿಸಲಾಗುವುದು. ಬೆಳಗಾವಿ ಹಾಗೂ ಬಾಗಲಕೋಟೆಯಲ್ಲಿರುವಂತೆ ಈ ವೃಕ್ಷ ಉದ್ಯಾನವನವೂ ನಿರ್ಮಾಣಗೊಂಡು ಪ್ರವಾಸಿಗರನ್ನು ಸೆಳೆಯಲಿದೆ. ಪಶ್ಚಿಮ ಘಟ್ಟದ ಜೀವಿ ವೈವಿಧ್ಯಗಳು ಹಾಗೂ ತುಳುನಾಡಿನ ಕುಲಕಸುಬು, ಕಂಬಳ ಮೊದಲಾದ ಜಾನಪದ ವಿಚಾರಗಳ ಬಗ್ಗೆ ಈ ವೃಕ್ಷ ಉದ್ಯಾನವನದಲ್ಲಿದ್ದು ಆಕರ್ಷಣೀಯವೆನಿಸಲಿದೆ ಎಂದು ವಿವರಿಸಿದರು.
ಕಾರ್ಯಕ್ರಮದಲ್ಲಿ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್, ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಅಲಿ, ಜಿ.ಪಂ.ಸದಸ್ಯರಾದ ಬಿ. ಪದ್ಮಶೇಖರ ಜೈನ್, ಮಂಜುಳಾ ಮಾಧವ ಮಾವೆ, ರಾಜ್ಯ ಮಾಲಿನ್ಯ ನಿಯಂತ್ರಣ ಅಭಿವೃದ್ಧಿ ಮಂಡಳಿ ಸದಸ್ಯಪಿಯೂಸ್ ಎಲ್ ರೊಡ್ರಿಗಸ್, ಶ್ರೀ ಕ್ಷೇತ್ರ ಕಾರಿಂಜ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಿ.ಜಿನರಾಜ ಆರಿಗ, ಬಂಟ್ವಾಳ ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ.ಸಿ. ಬಂಗೇರ, ಬಂಟ್ವಾಳ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸದಾಶಿವ ಬಂಗೇರ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ಜನಾರ್ದನ ಚಂಡ್ತಿಮಾರ್, ನಾವೂರು ಗ್ರಾ.ಪಂ. ಅಧ್ಯಕ್ಷೆ ಗುಲಾಬಿ, ತಾ.ಪಂ.ಸದಸ್ಯೆ ಸಪ್ನಾ ವಿಶ್ವನಾಥ ಪೂಜಾರಿ, ಮಂಗಳೂರು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ಸಂಜಯ್ ಎಸ್ ಬಿಜೂರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ| ಕರಿಕಲನ್, ಮಂಗಳೂರು ಉಪ ವಿಭಾಗ ಸಹಾಯಕ ಅರಣ್ಯಸಂರಕ್ಷಣಾಧಿಕಾರಿ ಸತೀಶ್ಬಾಬಾಎಸ್.ಎನ್., ಗ್ರಾಮ ಅರಣ್ಯ ಸಮತಿ ಅಧ್ಯಕ್ಷ ಉದಯ ಕುಮಾರ್, ಕಾವಳಪಡೂರು ಗ್ರಾ.ಪಂ.ಮಾಜಿ ಅಧ್ಯಕ್ಷ ಮಾಣಿಕ್ಯರಾಜ್ ಜೈನ್, ಎಪಿಎಂಸಿ ಸದಸ್ಯ ಆಲೋನ್ಸ್ ಉಪಸ್ಥಿತರಿದ್ದರು.
ಬಂಟ್ವಾಳ ವಲಯ ಅರಣ್ಯಾಧಿಕಾರಿ ಬಿ.ಸುರೇಶ್ ಸ್ವಾಗತಿಸಿದರು. ರಾಜ್ಯ ಪ್ರಧಾನ ಮುಖ್ಯ ಅರಣ್ಯಸಂರಕ್ಷಣಾಧಿಕಾರಿ ಬ್ರಿಜೇಶ್ ಕುಮಾರ್ ಪ್ರಸ್ತಾವಿಸಿದರು. ಆದಿರಾಜ್ ಜೈನ್ ಕಾರ್ಯಕ್ರಮ ನಿರೂಪಿಸಿದರು.


