ಬಂಟ್ವಾಳ: ಮಹಿಳೆಯರಿಗೆ ವಿವಿಧ ಯೋಜನೆಗಳ ಮೂಲಕ ಸಂಪಾದನೆ ಮಾಡಲು ಸರಕಾರ ನಾನಾ ಅವಕಾಶ ಮಾಡಿಕೊಟ್ಟಿದೆ ಎಂದು ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ ತಿಳಿಸಿದ್ದಾರೆ.
ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ತಾಲೂಕು ಸ್ತ್ರೀ ಶಕ್ತಿ ಒಕ್ಕೂಟ ಸಂಯುಕ್ತಾಶ್ರಯದಲ್ಲಿ ತಾಲೂಕಿನ ಬಿ.ಸಿ.ರೋಡಿನಲ್ಲಿನ ತಾ.ಪಂ. ಎಸ್ ಜಿ ಆರ್ ಎಸ್ ವೈ ಸಭಾಂಗಣದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮಹಿಳೆಯರು ಮನೆಯ ಜವಬ್ದಾರಿಗಳನ್ನು ನಿಭಾಯಿಸಿ ಮಹಿಳಾ ಸಂಘಟನೆಗಳಲ್ಲಿ ಪಾಲ್ಗೊಂಡು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು. ಸರಕಾರ ಮಹಿಳೆಯರಿಗೆ ಬೇರೆ ಬೇರೆ ಅವಕಾಶಗಳನ್ನು ನೀಡುತ್ತಿದ್ದು, ಇದನ್ನು ಸದುಪಯೋಗಪಡಿಸಿಕೊಳ್ಳಲು ಮುಂದಾಗಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಸದಸ್ಯ ಸಂಜೀವ ಪೂಜಾರಿ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ಪುಷ್ಪಲತಾ, ತಾ.ಪಂ. ಸದಸ್ಯೆ ಮಲ್ಲಿಕಾ ಶೆಟ್ಟಿ, ಇ.ಒ ರಾಜಣ್ಣ, ಒಕ್ಕೂಟದ ಉಪಾದ್ಯಕ್ಷೆ ರಂಜನಿ, ಕೋಶಾಧಿಕಾರಿ ಶಕುಂತಲಾ ಮತ್ತಿತರರು ಉಪಸ್ಥಿತರಿದ್ದರು.
