ನವದೆಹಲಿ: ಕಾಶ್ಮೀರ ಪ್ರತ್ಯೇಕತಾವಾದಿ ಸೈಯ್ಯದ್ ಅಲಿ ಶಾ ಗಿಲಾನಿ ಅವರನ್ನು ಪಾಕಿಸ್ತಾನ ಹೈಕಮಿಷನರ್ ಅಬ್ದುಲ್ ಬಾಸಿತ್ ಅವರು ಮಂಗಳವಾರ ಭೇಟಿ ಮಾಡಿ ಚರ್ಚಿಸಿದ್ದಾರೆ.
ನವದೆಹಲಿಯಲ್ಲಿರುವ ಪಾಕಿಸ್ತಾನ ರಾಯಭಾರ ಕಚೇರಿಗೆ ಭೇಟಿ ನೀಡಿದ ಅಬ್ದುಲ್ ಬಾಸಿತ್ ಅವರು, ಭಾರತದ ತೀವ್ರ ವಿರೋಧದ ನಡುವೆಯೂ ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ ಸೈಯ್ಯದ್ ಅಲಿ ಶಾ ಗಿಲಾನಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಬಾಸಿತ್ ಅವರ ಕ್ರಮವನ್ನು ಖಂಡಿಸಿ ಹಲವು ಸಂಘಸಂಸ್ಥೆಗಳು ರಾಯಭಾರ ಕಚೇರಿಯ ಮುಂದೆ ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಪಾಕ್ ಹೈಕಮಿಷನರ್ ಬಾಸಿತ್ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಹರಸಾಹ ಪಡುತ್ತಿದ್ದು, ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ಕೂಡ ನಡೆದಿದೆ. ಅಲ್ಲದೆ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಘು ಲಾಠಿ ಪ್ರವಾಹರವನ್ನು ಕೂಡ ನಡೆಸಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿದೆ.
ನಿನ್ನೆ ಕಾಶ್ಮೀರದ ಬಗ್ಗೆ ಮಾತನಾಡಿದ್ದ ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ ಸೈಯ್ಯದ್ ಅಲಿ ಶಾ ಗಿಲಾನಿ, ಕಾಶ್ಮೀರ ಅಂತಾರಾಷ್ಟ್ರೀಯ ವಿಚಾರವಾಗಿದ್ದು, ಇದು ಅಲ್ಲೇ ಬಗೆಹರಿಯಬೇಕಿದೆ ಎಂದು ಹೇಳಿದ್ದರು. ಗಿಲಾನಿ ಹೇಳಿಕೆ ಕುರಿತಂತೆ ಭಾರತ ಸರ್ಕಾರ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಕಾಶ್ಮೀರ ಭಾರತ ದೇಶದ ಪ್ರಮುಖ ಅಂಗವಾಗಿದೆ ಎಂದು ಸ್ಪಷ್ಟಪಡಿಸಿದೆ.