ಅಪವಿತ್ರ ಮೈತ್ರಿ ಸರ್ಕಾರ ಹೆಚ್ಚು ದಿನ ಉಳಿಯಲ್ಲ: ನಳಿನ್ ಕುಮಾರ್ ಕಟೀಲ್
ಸುಳ್ಯ: ಜನಾದೇಶ ಇಲ್ಲದ ಅಪವಿತ್ರ ಮೈತ್ರಿಯ ಸರ್ಕಾರ ರಾಜ್ಯದಲ್ಲಿ ಇದೆ. ಈ ಸರ್ಕಾರ ಹೆಚ್ಚು ಸಮಯ ಉಳಿಯುವುದಿಲ್ಲ. ಜನರ ಆಶೋತ್ತರಗಳನ್ನು ಈಡೇರಿಸಲು, ರಾಜ್ಯದ ಅಭಿವೃದ್ಧಿ ಮಾಡಲು ಈ ಸರ್ಕಾರದಿಂದ ಸಾಧ್ಯವಿಲ್ಲ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಸುಳ್ಯ ಮಂಡಲ ಸಮಿತಿಯ ವತಿಯಿಂದ ಇಲ್ಲಿನ ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ನಡೆದ ಸುಳ್ಯ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸತತ ಆರು ಬಾರಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಸುಳ್ಯದಲ್ಲಿ ಬಿಜೆಪಿ ಇತಿಹಾಸ ನಿರ್ಮಿಸಿದೆ. ಸರಳ ಸಜ್ಜನಿಕೆಯ ವ್ಯಕ್ತಿತ್ವದ ಅಂಗಾರರು ರಾಜ್ಯಕ್ಕೆ ಮಾದರಿಯಾಗಿದ್ದಾರೆ. ನಡೆ, ನುಡಿಯಲ್ಲಿ ತಪ್ಪದ ಅಂಗಾರರು ಸಜ್ಜನಿಕೆಯ ರಾಜಕಾರಣಕ್ಕೆ ಭಾಷ್ಯ ಬರೆದವರು. ತಮ್ಮ ನಡವಳಿಕೆಯ ಮೂಲಕ ಸಜ್ಜನಿಕೆಯನ್ನು ತೋರಿಸಿಕೊಟ್ಟವರು ಎಂದು ಅವರು ಬಣ್ಣಿಸಿದರು.
ಶಾಸಕ ಎಸ್.ಅಂಗಾರ ಮಾತನಾಡಿ, ಚುನಾವಣೆಯಲ್ಲಿ ಸುಳ್ಯ ಕ್ಷೇತ್ರದ ಗೆಲುವು ಒಬ್ಬ ವ್ಯಕ್ತಿಯ ಗೆಲುವಲ್ಲ, ಅದು ಪಕ್ಷ ಮತ್ತು ಸಂಘಟನಾ ಶಕ್ತಿಯ ಗೆಲುವು ಎಂದು ಹೇಳಿದರು.
ಸುಳ್ಯಕ್ಕೆ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡುವುದಕ್ಕೆ ಆದ್ಯತೆ ನೀಡಲಾಗುವುದು. 110 ಕೆ.ವಿ.ಸಬ್ಸ್ಟೇಷನ್ ಅನುಷ್ಠಾನ ಶೀಘ್ರದಲ್ಲಿಯೇ ಪೂರ್ತಿಗೊಳಿಸಲಾಗುವುದು ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡು ಮಂಡಲ ಸಮಿತಿ ಅಧ್ಯಕ್ಷ ಸುಧಾಮ ಗೋಷಾಡ, ಸುಳ್ಯ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿಯ ಸಂಚಾಲಕ ಎ.ವಿ.ತೀರ್ಥರಾಮ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬ್ರಿಜೇಶ್ ಚೌಟ, ತಾಲೂಕು ಪಂಚಾಯಿತಿ ಅಧ್ಯಕ್ಷ ಚನಿಯ ಕಲ್ತಡ್ಕ, ಉಪಾಧ್ಯಕ್ಷೆ ಶುಭದಾ ಎಸ್.ರೈ, ಎಪಿಎಂಸಿ ಅಧ್ಯಕ್ಷ ಅಡ್ಡಂತ್ತಡ್ಕ ದೇರಣ್ಣ ಗೌಡ, ಜಿ.ಪಂ.ಸದಸ್ಯರಾದ ಎಸ್.ಎನ್.ಮನ್ಮಥ, ಹರೀಶ್ ಕಂಜಿಪಿಲಿ, ಆಶಾ ತಿಮ್ಮಪ್ಪ, ಪುಷ್ಪಾವತಿ ಬಾಳಿಲ, ನ.ಪಂ.ಅಧ್ಯಕ್ಷೆ ಶೀಲಾವತಿ ಮಾಧವ ಮತ್ತಿತರರು ಉಪಸ್ಥಿತರಿದ್ದರು.